ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಮೂತ್ರ ವಿಸರ್ಜನೆಗೆ ತೆರಳಿದ್ದ ಸಂದರ್ಭದಲ್ಲಿ ವಿದ್ಯುತ್ ಶಾಕ್ ನಿಂದಾಗಿ ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ. ಈ ಘಟನೆ ನಗರದ ಕಲಾಸಿಪಾಳ್ಯದಲ್ಲಿ ನಡೆದಿದೆ. ಕರಿಯಪ್ಪ (22) ಹಾಗೂ ನಾಗರಾಜು (19) ಇಬ್ಬರೂ ಮೃತ ದುರ್ದೈವಿಗಳು.
ಈ ಕಾರ್ಮಿಕರು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನವರು ಎಂದು ತಿಳಿದು ಬಂದಿದೆ. ಇಬ್ಬರೂ ಒಜಾಸ್ ಎನ್ನುವ ಕಂಪನಿಯಲ್ಲಿ ಕಳೆದೊಂದು ವರ್ಷದಿಂದ ಕೆಲಸ ಮಾಡುತ್ತಿದ್ದರು. ರಾಜಕಾಲುವೆ ಸ್ವಚ್ಛಗೊಳಿಸುವ ಕೆಲಸ ಮಾಡಿಕೊಂಡಿದ್ದ ಇವರು ನಿನ್ನೆ ಮಲ್ಲಸಂದ್ರ ಬಳಿಯ ರಾಜಕಾಲುವೆ ಕೆಲಸ ಮುಗಿಸಿ ಎಚ್ ಎಸ್ ಆರ್ ಲೇಔಟ್ ನಲ್ಲಿರುವ ತಮ್ಮ ಮನೆಗೆ ಹಿಂದಿರುಗುತ್ತಿದ್ದರು. ಈ ಸಂದರ್ಭದಲ್ಲಿ ಲಾಲ್ ಬಾಗ್ ರಸ್ತೆಯ ನಾಲೆಯ ರಸ್ತೆ ಬಳಿ ಕೆಲಸ ಮಾಡುತ್ತಿದ್ದ ಸಂಗಡಿಗರನ್ನು ಕರೆದೊಯ್ಯಲು ಬಂದಿದ್ದಾರೆ. ಆಗ ಇಬ್ಬರೂ ಮೂತ್ರ ವಿಸರ್ಜನೆಗೆ ತೆರಳಿದ್ದಾರೆ. ಈ ಸಮಯದಲ್ಲಿ ತುಂಡಾಗಿದ್ದ ವಿದ್ಯುತ್ ವೈರ್ ತಗುಲಿ ಸ್ಥಳದಲ್ಲಿಯೇ ಇಬ್ಬರೂ ಸಾವನ್ನಪ್ಪಿದ್ದಾರೆ.
ಘಟನೆಯ ಕುರಿತು ಕಲಾಸಿಪಾಳ್ಯ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304(ಎ) ಅಡಿಯಲ್ಲಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.