ಹಾಸನ:- ದಸರಾ ಉದ್ಘಾಟನೆಗೆ ತಮ್ಮ ಹೆಸರು ಆಯ್ಕೆ ನಂತರ ಅಪಸ್ವರದ ಬಗ್ಗೆ ಬಾನು ಮುಷ್ತಾಕ್ ಪ್ರತಿಕ್ರಿಯೆ ಕೊಟ್ಟಿದ್ದು, ಟೀಕಾಕಾರರಿಗೆ ತಿರುಗೇಟು ಕೊಟ್ಟಿದ್ದಾರೆ.
ಈ ಬಗ್ಗೆ ನಾನು ಏನು ಮಾತನಾಡಲ್ಲ. ಕೋಟ್ಯಾಂತರ ಕನ್ನಡಿಗರು ಎಷ್ಟೊಂದು ಪ್ರೀತಿ ಅಭಿಮಾನ ಕೊಡುತ್ತಿದ್ದಾರೆ. ಒಬ್ಬರು ಅಥವಾ ಇಬ್ಬರ ನೆಗೆಟಿವಿಟಿಗೆ ಯಾಕೆ ಪ್ರತಿಕ್ರಿಯೆ ಕೊಡಬೇಕು. ಅದರ ಅಗತ್ಯ ಇಲ್ಲ ಎನ್ನಿಸುತ್ತೆ. ವಿರೋದ ಪಕ್ಷ ಆಡಳಿತ ಪಕ್ಷ ಇರಬೇಕು. ರಾಜಕೀಯ ಮಾಡಬೇಕು. ಆದರೆ ಯಾವ ವಿಚಾರದಲ್ಲಿ ರಾಜಕೀಯ ಮಾಡಬೇಕು ಯಾವುದರಲ್ಲಿ ಮಾಡಬಾರದು ಎನ್ನುವ ಪ್ರಜ್ಞೆ ಸಕ್ರಿಯ ರಾಜಕಾರಣಿ ಗಳಿಗೆ ಇರಬೇಕಾಗುತ್ತೆ ಎಂದು ಬಿಜೆಪಿ ನಾಯಕರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.
ಬಿಜೆಪಿ ಪಕ್ಷದಲ್ಲಿ ಮೈಸೂರಿನ ಸಂಸದ ಯದುವೀರ್ ಅಂತಹವರ ಸಂತತಿ ಹೆಚ್ಚಾಗಲಿ ಎಂದು ಅಪೇಕ್ಷೆ ಪಡುತ್ತೇನೆ . ಒಂದು ಸಮತೋಲನದಿಂದ ವಿಷಯ ಅನ್ವೇಷಣೆ ಮಾಡಿ ಆ ಬಗ್ಗೆ ದ್ವಂದ್ವ ಇಲ್ಲದೆ ಹೇಳಿಕೆ ನೀಡಬೇಕು. ಅಂತಹ ವಿದ್ಯಾವಂತ ಸುಸಂಸ್ಕೃತ ಮನಸುಗಳಿಗೆ ಮಾತ್ರ ಸಾಧ್ಯ. ಬೂಕರ್ ಅಂತಹ ಪ್ರಶಸ್ತಿ ಸಿಗೋದು ಸುಲಭದ ಮಾತಲ್ಲ. ಅದರ ಬಗ್ಗೆಯೂ ಒಂದಿಬ್ಬರು ಬಹಳ ಕೇವಲವಾಗಿ ಮಾತನಾಡುತ್ತಾರೆ. ಅದರ ಬಗ್ಗೆ ನನಗೆ ಬೇಜಾರಿಲ್ಲ. ಅವರವರ ಮಟ್ಟಕ್ಕೆ ತಕ್ಕಹಾಗೆ ಮಾತಾಡ್ತಾರೆ ಮಾತಾಡಲಿ ಎಂದು ಟಾಂಗ್ ಕೊಟ್ಟರು.
ಕನ್ನಡ ಬಾವುಟದ ಬಗ್ಗೆ ಮಾತನಾಡಿದ ಬಾನು ಮುಷ್ತಾಕ್, ಕನ್ನಡವನ್ನು ನನ್ನಷ್ಟು ಪ್ರೀತಿಸಿ. ಕನ್ನಡವನ್ನ ನನ್ನಷ್ಟು ಬಳಕೆ ಮಾಡಿ. ಕನ್ನಡವನ್ನು ನನ್ನಷ್ಟು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿ.ಅಲ್ಲಿನವರ ಬಾಯಲ್ಲಿ ಕನ್ನಡ ಎಂದು ಹೇಳಿಸುತ್ತಿದ್ದೇನೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಒಂದೊಂದು ಪುಟ ಓದುತ್ತಿದ್ದೇನೆ. ಅವರೂ ಬಾಯಿ ಬಿಟ್ಟುಕೊಂಡು ನೋಡುತ್ತಿದ್ದಾರೆ. ನನ್ನಂತೆ ನೀವು ಸಾಧನೆ ಮಾಡಿದ್ರೆ ಟೀಕೆ ಮಾಡಲು ಅರ್ಹತೆ ಸಿಗುತ್ತೆ. ಇಲ್ಲದೆ ಹೋದರೆ ನಿಮ್ಮ ಯಾವುದೇ ಮಾತಿನಲ್ಲಿ ಸ್ಪಷ್ಟತೆ ಇರುವುದಿಲ್ಲ. ನಂಬಿದವರನ್ನು ಕನ್ನಡ ಯಾವತ್ತೂ ಕೈ ಬಿಡಲ್ಲ, ಇದಕ್ಕೆ ನಾನೇ ಸಾಕ್ಷಿ ಎಂದು ಹೇಳುವ ಮೂಲಕ ಟೀಕಿಸಿದವರಿಗೆ ಚಾಟಿ ಬೀಸಿದರು.