ಬೆಂಗಳೂರು:- ಕೋಮುಗಲಭೆ ಸೃಷ್ಟಿಸಿ ಜನರ ಜೀವನದಲ್ಲಿ ಚೆಲ್ಲಾಟ ಆಡಬಾರದು ಎಂದು ಸಚಿವ ಹೆಚ್ ಸಿ ಮಹದೇವಪ್ಪ ಆಕ್ರೋಶ ಹೊರಹಾಕಿದ್ದಾರೆ.
ಮದ್ದೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೋಮು ಸೌಹಾರ್ದತೆಯನ್ನು ಕಾಪಾಡುವುದು ಅತ್ಯಗತ್ಯ. ಸಾರ್ವಜನಿಕ ಜೀವನದಲ್ಲಿರುವವರು ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಂಡು ಜನರ ಜೀವನದಲ್ಲಿ ಚೆಲ್ಲಾಟ ಆಡಬಾರದು ಎಂದು ಅವರು ಹೇಳಿದ್ದಾರೆ. ಸಾರ್ವಜನಿಕ ವ್ಯಕ್ತಿಗಳು ಹಾಗೂ ಸಂಘಟನೆಗಳು ಸಾಮಾಜಿಕ ಜವಾಬ್ದಾರಿಯನ್ನು ಅರಿತು ವರ್ತಿಸಬೇಕು ಎಂದು ಒತ್ತಿ ಹೇಳಿದ್ದಾರೆ.
ಕೋಮು ಭಾವನೆಗಳನ್ನು ಕೆರಳಿಸುವುದು, ಉದ್ರೇಕಕಾರಿ ಭಾಷಣಗಳನ್ನು ಮಾಡುವುದು ಮತ್ತು ಭಾವನಾತ್ಮಕ ವಿಷಯಗಳನ್ನು ಪ್ರಚೋದಿಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ. ಈ ರೀತಿಯ ಘಟನೆಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ಸರಿಯಲ್ಲ. ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ತಮ್ಮ ಮಾತಿನ ಜವಾಬ್ದಾರಿಯನ್ನು ಅರಿತು ಮಾತನಾಡಬೇಕು. ಧಾರ್ಮಿಕ ತೀವ್ರವಾದ, ಕೋಮು ಪ್ರಚೋದನೆ ಪ್ರವೃತ್ತಿ ಯಾವುದೇ ಧರ್ಮದವರು ಮಾಡಿದರೂ ಖಂಡನೀಯ. ಒಂದು ಧಾರ್ಮಿಕ ಆಚರಣೆಯನ್ನ ಒಂದು ರಾಜಕೀಯ ವಿಷಯ ತಗೊಂಡು ಗೊಂದಲ ಉಂಟುಮಾಡಿದರೆ ಇದು ಸರಿಯಾದ ಕ್ರಮ ಅಲ್ಲ ಎಂದು ಮಹದೇವಪ್ಪ ಹೇಳಿದ್ದಾರೆ.