ವಿಜಯಸಾಕ್ಷಿ ಸುದ್ದಿ, ಧಾರವಾಡ :ನೂತನ ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದಾಗಿನಿಂದ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ಇದು ಜನಸ್ನೇಹಿ ಸರ್ಕಾರದ ಸಾಧನೆಯಾಗಿದೆ ಎಂದು ಇಂಧನ ಖಾತೆ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಅವರು ಮಂಗಳವಾರ ಮಧ್ಯಾಹ್ನ ಧಾರವಾಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿದರು.
ಇಂಧನ ಇಲಾಖೆಯು ಅಗತ್ಯವಿರುವ 1,500 ಜೆ.ಇ, ಎಇ ಮತ್ತು 3 ಸಾವಿರ ಲೈನ್ಮನ್ಗಳ ನೇಮಕಾತಿ ಮಾಡಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆಗಾಗ ವಿದ್ಯುತ್ ಕಡಿತ, ಕಡಿಮೆ ವೋಲ್ಟೇಜ್ನಂತಹ ಸಮಸ್ಯೆಗಳು ವರದಿಯಾಗುತ್ತಿದ್ದು, ಇವುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಧಿಕಾರಿಗಳು ಮತ್ತು ಸಿಬ್ಬಂದಿ ನಡುವೆ ಉತ್ತಮ ಸಮನ್ವಯ ಇರಬೇಕು. ಯಾವುದೇ ಕಡತಗಳು ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು. ಜನರಿಗೆ ವಿದ್ಯುತ್ ಬಿಲ್ ಸಂಬಂಧಿತ ಸಮಸ್ಯೆಗಳು, ಹೊಸ ಸಂಪರ್ಕ ಪಡೆಯುವಲ್ಲಿನ ವಿಳಂಬ, ವಿದ್ಯುತ್ ಕಂಬಗಳು ಮತ್ತು ತಂತಿಗಳ ನಿರ್ವಹಣೆ, ಹಲವು ಸಣ್ಣ ಸಣ್ಣ ತೊಂದರೆಗಳು ಎದುರಾಗುತ್ತಿವೆ. ಅದಕ್ಕೆ ಸೂಕ್ತವಾದ ಕ್ರಮಗಳನ್ನು ವಹಿಸಬೇಕೆಂದು ಸಚಿವರು ಸೂಚಿಸಿದರು.
ಗ್ರಾಹಕ ಸೇವಾ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಮುಂದಿನ ದಿನಗಳಲ್ಲಿ ಇಂಧನ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಕ್ರಮಕೈಗೊಳ್ಳುವುದಾಗಿ ಅವರು ಹೇಳಿದರು.
ಪ್ರಸಕ್ತ ಸಾಲಿನ ಮುಂಗಾರು ಮಳೆಗೆ ಧಾರವಾಡ ಜಿಲ್ಲೆಯ ವಿವಿಧ ಕಡೆ ವಿದ್ಯುತ್ ಕಂಬ, ಟಿಸಿ ಮತ್ತು ಇತರ ಪರಿಕರಗಳಿಗೆ ಹಾನಿಯಾಗಿದ್ದು, ಅಂದಾಜು 1.71 ಕೋಟಿ ಮೊತ್ತದ ಹಾನಿಯಾಗಿದೆ ಎಂದು ಸಚಿವರು ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಎನ್.ಹೆಚ್. ಕೊನರಡ್ಡಿ, ಎಮ್.ಆರ್. ಪಾಟೀಲ, ಮಹೇಶ ಟೆಂಗಿನಕಾಯಿ ಮಾತನಾಡಿದರು. ವೇದಿಕೆಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜಕುಮಾರ ಪಾಂಡೆ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್ ಫೀರ್ ಎಸ್.ಖಾದ್ರಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಉಪಸ್ಥಿತರಿದ್ದರು.
ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್ ಸ್ವಾಗತಿಸಿ, ಸಭೆ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಪ್ರೊಬೆಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಹೆಸ್ಕಾಂ ಮತ್ತು ಕೆ.ಪಿ.ಟಿ.ಸಿ.ಎಲ್ ಅಧಿಕಾರಿಗಳು ಭಾಗವಹಿಸಿದ್ದರು.
2004ರಿಂದಲೂ ಅಭ್ಯಾಸವಾಗಿರುವ ಅನಧಿಕೃತ ವಿದ್ಯುತ್ ಸಂಪರ್ಕಗಳನ್ನು ಸಕ್ರಮಗೊಳಿಸಲು ನಿರ್ದಿಷ್ಟ ಮಾನದಂಡಗಳನ್ನು ಮಾಡಲಾಗಿದೆ. ಇದಕ್ಕಾಗಿ ಕುಸುಮ ಬಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ. 500 ಮೀ. ವ್ಯಾಪ್ತಿಯ ಹೊರಗಿರುವ ಪಂಪ್ಸೆಟ್ ವಿದ್ಯುತ್ ಸಂಪರ್ಕಗಳಿಗೆ ಈಗಾಗಲೇ ಶೇ. 60ರಷ್ಟು ಇರುವ ರಿಯಾಯಿತಿಯನ್ನು ಶೇ. 80ರಷ್ಟು ಹೆಚ್ಚಳ ಮಾಡಿ ಯಾವುದೇ ಅಕ್ರಮ, ಹೆಚ್ಚುವರಿ ಆರ್ಥಿಕ ವೆಚ್ಚವಾಗದಂತೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.



