ವಿಜಯಸಾಕ್ಷಿ ಸುದ್ದಿ, ಗದಗ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ಸಂಜೀವಿನಿ–ಡೇ–ಎನ್.ಆರ್.ಎಲ್. ಯೋಜನೆಯಡಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿರುವ ಕೃಷಿ ಮೇಳದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಗದಗ ಜಿಲ್ಲಾ ಪಂಚಾಯಿತಿಯಿಂದ 26 ಬಸ್ಗಳ ಮೂಲಕ ಒಟ್ಟು 1345 ರೈತ ಮಹಿಳೆಯರಿಗೆ ಭಾಗವಹಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.
ಸೋಮವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ನಗರದ ಜಿಲ್ಲಾಡಳಿತ ಭವನದಲ್ಲಿ ಅಧ್ಯಯನ ಪ್ರವಾಸಕ್ಕೆ ಹೊರಟಿರುವ ಬಸ್ಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ, ಕೃಷಿ ಮೇಳದಲ್ಲಿ ಭಾಗವಹಿಸುತ್ತಿರುವ ಕೃಷಿ ಸಖಿ, ಪಶು ಸಖಿ ಹಾಗೂ ರೈತ ಮಹಿಳೆಯರು ಮೇಳದಲ್ಲಿ ಕೃಷಿಗೆ ಸಂಬಂಧಿತ ಇತ್ತೀಚಿನ ತಂತ್ರಜ್ಞಾನ, ಕೃಷಿ ಪದ್ಧತಿಗಳನ್ನು ತಿಳಿದುಕೊಂಡು ತಮ್ಮ ಬೇಸಾಯ ಪದ್ಧತಿಗಳಲ್ಲಿ ಅಳವಡಿಸಿಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿ.ಪಂ ಯೋಜನಾ ನಿರ್ದೇಶಕರು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಸಂಜೀವಿನಿ ಯೋಜನೆಯ ಸಿಬ್ಬಂದಿಗಳು, ಕೃಷಿ ಜೀವನೋಪಾಯ ಚಟುವಟಿಕೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ರೈತ ಮಹಿಳೆಯರು ಹಾಜರಿದ್ದರು.