ಯಾದಗಿರಿ:- ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆಯೊಂದು ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಪೊಲೀಸರು ಓರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದು, 2.62 ಲಕ್ಷ ರೂ. ಮೌಲ್ಯದ ಅಕ್ಕಿ, ಗೂಡ್ಸ್ ವಾಹನವೊಂದನ್ನು ಸೀಜ್ ಮಾಡಿದ್ದಾರೆ. ರಾಜು ಪವಾರ್ ಬಂಧಿತ ಆರೋಪಿ. ಇನ್ನೋರ್ವ ಆರೋಪಿ ದೇವರಾಜ ರಾಠೋಡ್ ಪರಾರಿಯಾಗಿದ್ದಾನೆ.
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸ್ವಕ್ಷೇತ್ರದಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಶಹಾಪುರ ತಾಲೂಕಿನ ಗೋಗಿ ಗ್ರಾಮದ ಹೊರವಲಯದಲ್ಲಿ ಪಡಿತರ ಕಾರ್ಡ್ದಾರರಿಂದ ಅಕ್ಕಿ ಖರೀದಿಸಿ ಸಾಗಾಟ ಮಾಡಲಾಗ್ತಿತ್ತು. ಈ ವೇಳೆ ಆಹಾರ ನಿರೀಕ್ಷಕ ಬಸವರಾಜ್ ಹಾಗೂ ಪಿಎಸ್ಐ ದೇವಿಂದ್ರರೆಡ್ಡಿ ಅವರು ದಾಳಿ ನಡೆಸಿದ್ದಾರೆ. ತೆಲಂಗಾಣ ಪಾಸಿಂಗ್ ಹೊಂದಿರುವ ಗೂಡ್ಸ್ ವಾಹನದಲ್ಲಿ 2.62 ಲಕ್ಷ ರೂ. ಮೌಲ್ಯದ 158 ಚೀಲಗಳಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ.
ಪೊಲೀಸರು ಅಕ್ಕಿ ಸಹಿತ ಗೂಡ್ಸ್ ವಾಹನವನ್ನು ಜಪ್ತಿ ಮಾಡಿಕೊಂಡಿದ್ದು, ಗೋಗಿ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿದೆ.