ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ನಗರದ ಜವಳಗಲ್ಲಿಯಲ್ಲಿನ ‘ಪ್ರಭುವಿನೆಡೆಗೆ ಪ್ರಭುತ್ವ’ ಕಾರ್ಯಕ್ರಮ ಯಂತ್ರ ಹಾಗೂ ಇಂದಿರಾವನವನ್ನು ವೀಕ್ಷಣೆ ಮಾಡಿದರು. ನಂತರ ಎಸ್ಪಿ ಕಚೇರಿಯಲ್ಲಿ ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ನಿಯಂತ್ರಣ ಕೇಂದ್ರವನ್ನು ಉದ್ಘಾಟಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಜವಳಗಲ್ಲಿಯಲ್ಲಿನ ಪ್ರಭುವಿನೆಡೆಗೆ ಪ್ರಭುತ್ವದ ಕಾರ್ಯಕ್ರಮದ ಯಂತ್ರದ ಬಟನ್ ಒತ್ತುವ ಮೂಲಕ ಜಿಲ್ಲೆಯ ಜನಸಂಖ್ಯೆ ವಿವರಗಳನ್ನು ನೀಡುವಂತೆ ಕೋರಿದರು. ನಂತರ ಇಂದಿರಾವನ ವೀಕ್ಷಣೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳುವಷ್ಟರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೋರಿದ ಜಿಲ್ಲೆಯ ಜನಸಂಖ್ಯೆ ವಿವರಗಳನ್ನು ಸಿದ್ಧಪಡಿಸಿ ವರದಿಯನ್ನು ಜಿಲ್ಲಾಡಳಿತದಿಂದ ನೀಡಲಾಯಿತು.
ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮದ ಅನುಷ್ಠಾನ ಉತ್ತಮವಾಗಲಿ, ಜನಸಾಮಾನ್ಯರು ಸರ್ಕಾರಿ ಸೇವೆಗಳಿಗಾಗಿ ವಿನಾಕಾರಣ ಅಲೆದಾಟ ತಪ್ಪಿಸಿ ಶೀಘ್ರ ಸೌಲಭ್ಯ ಹಾಗೂ ಸಮಸ್ಯೆಗಳಿಗೆ ಪರಿಹಾರ ದೊರೆಯಲು ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ಪೂರಕವಾಗಲಿ ಎಂದು ಶುಭ ಕೋರಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ಅನುಷ್ಠಾನ ಕುರಿತಂತೆ ವಿವರಿಸುತ್ತಾ, ಮತದಾರ ಪ್ರಭುವಿನ ಮನೆ ಬಾಗಿಲಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸುವ ಕಾರ್ಯ ಇದಾಗಿದೆ. ಈ ಕಾರ್ಯಕ್ರಮವು ಆಡಳಿತ ವ್ಯವಸ್ಥೆಯನ್ನು ಚುರುಕುಗೊಳಿಸಲು ಹಾಗೂ ಸಾರ್ವಜನಿಕರಿಗೆ ತ್ವರಿತವಾಗಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜಾರಿ ಮಾಡಲಾಗಿದೆ. ಈ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಯಶಸ್ವಿಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರ ಮಹಾತ್ವಾಕಾಂಕ್ಷಿ ಕಾರ್ಯಕ್ರಮ ಇದಾಗಿದೆ. ಈ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಗಸ್ಟ್ 15ರಂದು ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು. ಈವರೆಗೆ ಒಟ್ಟು 14 ವಿವಿಧ ಅಹವಾಲುಗಳು ಸಾರ್ವಜನಿಕರಿಂದ ಸ್ವೀಕೃತವಾಗಿದ್ದು, ಬಹುತೇಕ ಎಲ್ಲ ಅಹವಾಲುಗಳಿಗೂ ಪರಿಹಾರ ಕಂಡುಕೊಳ್ಳಲಾಗಿದೆ. ಇದೊಂದು ಮಾದರಿ ಕಾರ್ಯಕ್ರಮವಾಗಿದ್ದು, ಮುಂದಿನ ಹಂತದಲ್ಲಿ ವಿಸ್ತರಣೆ ಮಾಡುವ ಕುರಿತು ಯೋಜಿಸಲಾಗುತ್ತಿದೆ ಎಂದು ಮಾಹಿತಿ ಒದಗಿಸಿದರು.
ಪ್ರ.ಪ್ರ. ಕಾರ್ಯಕ್ರಮ ಕುರಿತಂತೆ ನಗರದಲ್ಲಿ ಒಟ್ಟು ಮೂರು ಕಡೆ ಯಂತ್ರಗಳನ್ನು ಇರಿಸಲಾಗಿದೆ. ಜಿಲ್ಲಾ ಕ್ರೀಡಾಂಗಣ, ಜವಳಗಲ್ಲಿ ಹಾಗೂ ಬೆಟಗೇರಿಯ ತೆಂಗಿನಕಾಯಿ ಬಜಾರಿನಲ್ಲಿ ಪ್ರ.ಪ್ರ. ಯಂತ್ರಗಳು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿವೆ. ಸಾರ್ವಜನಿಕರು ದಿನದ 24 ಗಂಟೆಗಳಲ್ಲಿಯೂ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ಆರಂಭಿಕವಾಗಿ 10 ಅಂಶಗಳನ್ನು ಒಳಗೊಂಡಿದ್ದು, ಸಾರ್ವಜನಿಕರು ದೂರುಗಳನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ಹಿರಿಯ ನಾಗರಿಕರ ಸಹಾಯ, ತುರ್ತು ವೈದ್ಯಕೀಯ ಸೇವೆ, ಅಕ್ರಮ ಮದ್ಯ ಮಾರಾಟ, ರಸ್ತೆ ಸುರಕ್ಷತೆ ಕ್ರಮ, ಕಾನೂನು ಬಾಹಿರ ಹಾಗೂ ಸಾಮಾಜಿಕ ವಿದ್ರೋಹ ಚಟುವಟಿಕೆ ವಿರುದ್ಧ ಕ್ರಮ, ಜಮೀನು ಹಕ್ಕುಪತ್ರ, ಪಿಂಚಣಿ ವಿಷಯಗಳಿಗೆ ಸಂಬಂಧಿಸಿದಂತೆ, ಪಂಚಾಯಿತಿಗಳ ಕೆಲ ಸಮಸ್ಯೆಗಳ ಬಗ್ಗೆ ದೂರು ಸಲ್ಲಿಸಬಹುದಾಗಿದೆ ಎಂದು ಎಸ್ಪಿ ರೋಹನ್ ಜಗದೀಶ್ ಹೇಳಿದರು.