- ಕೊರೊನಾ 3ನೇ ಅಲೆ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಚರ್ಚೆ
ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಕೊರೊನಾ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಜುಲೈ 16) 6 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ. ರಾಜ್ಯಗಳಲ್ಲಿನ ಸಧ್ಯದ ಕೊರೊನಾ ಪರಿಸ್ಥಿತಿ ಮತ್ತು ನಿರೀಕ್ಷಿತ 3ನೇ ಅಲೆ ತಡೆಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ.
ಮಂಗಳವಾರ ಈಶಾನ್ಯ ಭಾಗದ 8 ರಾಜ್ಯಗಳ ಜೊತೆ ಚರ್ಚೆ ನಡೆಸಿದ ಪ್ರಧಾನಿ ಕೊರೊನಾ ನಿರ್ಲಕ್ಷ ಮಾಡದಂತೆ ಗಂಭೀರ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರದ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ತಮಿಳುನಾಡು, ಕೇರಳ, ಆಂದ್ರಪ್ರದೇಶ, ಮಹಾರಾಷ್ಟ್ರ, ಓಡಿಸ್ಸಾ ಮುಖ್ಯಮಂತ್ರಿಗಳು ಸಹ ಭಾಗವಹಿಸುವರು.
ಜುಲೈ 19ರಂದು ಕರ್ನಾಟಕದಲ್ಲಿ ಅನ್ ಲಾಕ್ 3.O ಅಂತ್ಯಗೊಳ್ಳಲಿದ್ದು, ಮುಂದೇನು ಎನ್ನುವ ಪ್ರಶ್ನೆಗೂ ಮೋದಿ ಸಭೆಯ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧಾರ ಪ್ರಕಟಿಸಲಿದ್ದಾರೆ.
ಅನ್ ಲಾಕ್ ನಂತರ ವಿವಿಧ ರಾಜ್ಯಗಳಲ್ಲಿ ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಕುರಿತು ಪ್ರಧಾನಿ ಮೋದಿ ಈಗಾಗಲೆ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮತ್ತೆ ಲಾಕ್ ಡೌನ್ ಅಥವಾ ಇನ್ನಷ್ಟು ಕಠಿಣ ಕ್ರಮದ ಕುರಿತು ಸಲಹೆ ನೀಡುವ ಸಾಧ್ಯತೆ ಇದೆ.