ಅವಕಾಶ ವಂಚಿತರಿಗೆ ಸಮಾನ ಅವಕಾಶಗಳನ್ನು ನೀಡಲು ಸಮೀಕ್ಷೆ ಅಗತ್ಯ; ಸಿಎಂ ಸಿದ್ದರಾಮಯ್ಯ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ನಡೆಸಲು ಉದ್ದೇಶಿಸಿರುವ ಸಮೀಕ್ಷೆ ಕೇವಲ ಜಾತಿ ಸಮೀಕ್ಷೆಯಾಗಿರದೇ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಜನರ ಜಾತಿಯ ವಿವರ ಪಡೆಯುವ ಜೊತೆಗೆ ಅವರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು, ಅವಕಾಶ ವಂಚಿತರಿಗೆ ಸಮಾನ ಅವಕಾಶಗಳನ್ನು ನೀಡಲು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಅವರು ಶನಿವಾರ ಗದುಗಿನ ಸರ್ಕ್ಯೂಟ್ ಹೌಸ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಾತಿ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ಅಡಿಯಲ್ಲಿ ವಿವಿಧ ಜಾತಿಗಳನ್ನು ಉಲ್ಲೇಖಿಸಲಾಗುವುದೇ ಎಂಬುದಕ್ಕೆ ಉತ್ತರಿಸಿ, ಇದರ ಬಗ್ಗೆ ಅಭಿಪ್ರಾಯಗಳನ್ನು ತಿಳಿಸಲಾಗಿದ್ದು, ಅನಗತ್ಯವಿರುವ ಅಂಶಗಳನ್ನು ತೆಗೆದುಹಾಕಲು ಹಿಂದುಳಿದ ವರ್ಗಗಳ ಆಯೋಗವೇ ನಿರ್ಧರಿಸುತ್ತದೆ. ಆಯೋಗವು ಶಾಸನಬದ್ಧ ಸಂಸ್ಥೆಯಾಗಿದ್ದು, ಸಮೀಕ್ಷೆ ನಡೆಸಲು ಮಾರ್ಗಸೂಚಿಗಳನ್ನಷ್ಟೇ ಸರ್ಕಾರ ನೀಡಿದೆ.

1,75,000 ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದ್ದು, ಒಬ್ಬ ಶಿಕ್ಷಕರು ತಲಾ 150 ಮನೆಗಳಿಂದ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಸಮೀಕ್ಷಾ ಕಾರ್ಯ 15 ದಿನಗಳ ಕಾಲ ನಡೆಯಲಿದೆ. ಸಮೀಕ್ಷೆಯಲ್ಲಿ ಧರ್ಮ, ಜಾತಿ, ಉಪಜಾತಿ, ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ಮಾಹಿತಿಗಳನ್ನು ಕಲೆಹಾಕಲಿದ್ದಾರೆ ಎಂದರು.

ಜಾತಿಗಣತಿಯ ಹಿಂದೆ ಷಡ್ಯಂತ್ರವಿದೆ ಎಂದು ವಚನಾನಂದ ಸ್ವಾಮೀಜಿಗಳು ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರವೂ ಜಾತಿ ಸಮೀಕ್ಷೆ ನಡೆಸಲಿದ್ದು, ಅದರಲ್ಲಿಯೂ ಷಡ್ಯಂತ್ರವಿರಲಿದೆಯೇ? ಸಮೀಕ್ಷೆಗೆ ಯಾವುದೇ ಸಚಿವರು ವಿರೋಧ ವ್ಯಕ್ತಪಡಿಸಿಲ್ಲ. ಸಮಾಜದಲ್ಲಿ ಸಮಾನತೆ ತರಲು ಬಡವರಿಗೆ ಸರ್ಕಾರಿ ಯೋಜನೆಗಳಲ್ಲಿ ಆದ್ಯತೆ ನೀಡಬೇಕಾಗುತ್ತದೆ ಎಂದರು.

ಸಮೀಕ್ಷೆಯ ನಿರ್ಧಾರವನ್ನು ಮರುಪರಿಶೀಲಿಸಲು ಮಾನ್ಯ ರಾಜ್ಯಪಾಲರು ಸೂಚನೆ ನೀಡುವಂತೆ ಬಿಜೆಪಿಯವರು ಮನವಿ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮೀಕ್ಷೆಯ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಸಮೀಕ್ಷೆಯ ವಿಚಾರದಲ್ಲಿ ಜಾತಿ ಒಡೆಯುವ ಪ್ರಶ್ನೆಯೇ ಇಲ್ಲ ಎಂದರು.

ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸುವ ಬಗ್ಗೆ ಪ್ರತಿಕ್ರಿಯಿಸಿ, ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸುವ ಶಿಫಾರಸ್ಸನ್ನು ಹಿಂದಿನ ಬಿಜೆಪಿ ಸರ್ಕಾರವೇ ಮಾಡಿತ್ತು. ಆದರೆ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ವಾಪಸ್ಸು ಕಳಿಸಿದ್ದು, ಅದಕ್ಕೆ ವಿವರಣೆಯನ್ನು ಸರ್ಕಾರ ನೀಡಲಿದೆ. ಯಾವುದೇ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರವೇ ತೆಗೆದುಕೊಳ್ಳುತ್ತದೆ ಎಂದರು.

ರಾಜ್ಯದಲ್ಲಿ ಭಾರೀ ಮಳೆಯಿಂದ ಬೆಳೆಹಾನಿ ಸಂಭವಿಸಿರುವ ಕುರಿತಾಗಿ ಉತ್ತರಿಸುತ್ತಾ, ರಾಜ್ಯದಲ್ಲಿ ಸಂಭವಿಸಿರುವ ಬೆಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದ್ದು, ವರದಿ ಬಂದ ನಂತರ ಬೆಳೆ ಪರಿಹಾರ ನೀಡಲಾಗುವುದು. ಗದಗ ಜಿಲ್ಲೆಯಲ್ಲಿ ಇನ್ನೆರಡು ದಿನಗಳಲ್ಲಿ ಜಂಟಿ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಸಚಿವ ಎಚ್.ಕೆ. ಪಾಟೀಲ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಶಾಸಕರಾದ ಜಿ.ಎಸ್. ಪಾಟೀಲ, ಎನ್.ಎಚ್. ಕೋನರಡ್ಡಿ ಮುಂತಾದವರಿದ್ದರು.

ರಸ್ತೆ ಗುಂಡಿಗಳ ಬಗ್ಗೆ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ:
ಈ ಬಾರಿ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗಿರುವ ಕಾರಣ, ರಸ್ತೆಗಳು ಹಾಳಾಗಿರುವುದು ನಿಜ. ಈ ಬಗ್ಗೆ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಸಭೆ ನಡೆಸಿ, ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗುವುದು. ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಒಂದು ರಸ್ತೆಯನ್ನೂ ನಿರ್ಮಿಸಿಲ್ಲ, ರಸ್ತೆ ಗುಂಡಿಗಳನ್ನೂ ಮುಚ್ಚಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮತಗಳ್ಳತನದ ಬಗ್ಗೆ ಮಾಡಿರುವ ಆರೋಪದ ಕುರಿತು ಪ್ರಶ್ನೆಗೆ ಉತ್ತರಿಸಿದ ಸಿಎಂ, ರಾಹುಲ್ ಗಾಂಧಿಯವರು ಅಳಂದ ಕ್ಷೇತ್ರದಲ್ಲಿ ಸುಮಾರು 6 ಸಾವಿರ ಮತದಾರರ ಹೆಸರನ್ನು ಕೈಬಿಟ್ಟಿರುವ ಮತಗಳ್ಳತನದ ವಿಚಾರವನ್ನು ಉಲ್ಲೇಖಿಸಿದ್ದು, ಇದು ಸತ್ಯವಾಗಿದೆ. ಅಳಂದದಲ್ಲಿರುವ ಮತಗಳ್ಳತನ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಯಲಿದೆ ಎಂದರು.


Spread the love

LEAVE A REPLY

Please enter your comment!
Please enter your name here