ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಪಟ್ಟಣದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಅಕ್ಟೋಬರ್ 5ರಂದು ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶ ಜರುಗಲಿದ್ದು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ ಪಾಟೀಲ ಹೇಳಿದರು.
ಅವರು ಶುಕ್ರವಾರ ಪಟ್ಟಣದ ಪಿಡಬ್ಲ್ಯುಡಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಬಿಸಿ ವರ್ಗಗಳಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಯೋಜನೆಗಳ ಮಹತ್ವಗಳ ಕುರಿತು ಒಬಿಸಿ ವರ್ಗದ ಜನರಿಗೆ ತಿಳುವಳಿಕೆ ನೀಡುವ ಉದ್ದೇಶದಿಂದ ಜಾಗೃತಿ ಸಮಾವೇಶವನ್ನು ರೋಣದಲ್ಲಿ ಹಮ್ಮಿಕೊಂಡಿದ್ದು, ಸಚಿವರಾದ ಮಧು ಬಂಗಾರಪ್ಪ, ಎಚ್.ಕೆ. ಪಾಟೀಲ ಭಾಗವಹಿಸಲಿದ್ದಾರೆ ಎಂದರು.
ಶಿವಾನಂದ ಬಾಚಂಗಿ ಮಾತನಾಡಿ, ಒಬಿಸಿಯವರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ದೃಷ್ಟಿಯಿಂದ ಮುಂದೆ ಬರಬೇಕು ಎನ್ನುವುದು ಕಾಂಗ್ರೆಸ್ ಪಕ್ಷದ ವರಿಷ್ಠರ ಅಭಿಲಾಷೆಯಾಗಿದೆ. ಅಲ್ಲದೆ, ಜನಾಂಗದ ಅಭಿವೃದ್ಧಿಗಾಗಿ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವುಗಳನ್ನು ಒಬಿಸಿ ಜನಾಂಗದವರು ಸದ್ಬಳಕೆ ಮಾಡಿಕೊಳ್ಳಬೇಕು ಎಂಬ ಮಹತ್ವದ ಉದ್ದೇಶದಿಂದ ಸಮಾವೇಶವನ್ನು ಹಮ್ಮಿಕೊಂಡಿದ್ದು, ಮತಕ್ಷೇತ್ರದ ಸುಮಾರು 5 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಮಾವೇಶ ಶಾಸಕ ಜಿ.ಎಸ್. ಪಾಟೀಲರ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದರು.
ರಾಜ್ಯ ಉಪಾಧ್ಯಕ್ಷ ಎಚ್.ಎಸ್. ಸೋಂಪುರ, ತಾ.ಪಂ ಮಾಜಿ ಸದಸ್ಯ ಅಂದಪ್ಪ ಬಿಚ್ಚೂರ, ಶರಣಪ್ಪ ಬೆಟಗೇರಿ, ಬಸವರಾಜ ನವಲಗುಂದ, ಯಚ್ಚರಗೌಡ ಗೋವಿಂದಗೌಡ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಶೇಟ್ಟರ ಮಾತನಾಡಿ, ಒಬಿಸಿ ವರ್ಗದವರು ಕಾಂಗ್ರೆಸ್ ಪಕ್ಷದ ಹಿತಚಿಂತಕರು. ಈ ವರ್ಗದವರು ಅನ್ಯ ಪಕ್ಷದಲ್ಲಿದ್ದರೂ ಅವರಿಗೆ ಕಾಂಗ್ರೆಸ್ ಪಕ್ಷದ ಮಹತ್ವವನ್ನು ತಿಳಿಸಿ ಅವರನ್ನು ಕರೆತರುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ಅಲ್ಲದೆ, ಸರ್ಕಾರ ಒಬಿಸಿ ವರ್ಗದ ಜನರಿಗೆ ನೀಡಿರುವ ಸೌಲಭ್ಯಗಳನ್ನು ತಿಳಿಸುವುದು ಸಹ ಮುಖ್ಯವಾಗಿದ್ದು, ಪಕ್ಷದ ಒಬಿಸಿ ವರ್ಗದ ಮುಖಂಡರು ಸಮಾವೇಶದ ಯಶಸ್ಸಿಗೆ ಶ್ರಮಿಸಬೇಕು ಎಂದರು.



