ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಎಲ್ಲ ಅರ್ಹ ಫಲಾನುಭವಿಗಳನ್ನು ಯೋಜನೆ ವ್ಯಾಪ್ತಿಗೆ ತರಲು ಗದಗ ತಾಲೂಕು ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಮತ್ತು ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ಪರಿಹಾರ ಸಭೆ ಹಮ್ಮಿಕೊಳ್ಳಲಾಗಿದೆ.
ಗದಗ ತಾಲೂಕು ಪಂಚಾಯಿತಿ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರ ನಿರ್ದೇಶನದ ಮೇರೆಗೆ ಈ ಕಾರ್ಯಕ್ರಮಗಳನ್ನು ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಆಯೋಜಿಸಲಾಗುತ್ತಿದೆ. ಸರ್ಕಾರದ ಜನಪರ ಯೋಜನೆಗಳು ಗ್ರಾಮ ಮಟ್ಟದಲ್ಲಿ ತಲುಪುವಂತೆ ಮಾಡುವುದು ಹಾಗೂ ಯಾವುದೇ ಅರ್ಹ ಫಲಾನುಭವಿಯು ಯೋಜನೆಯಿಂದ ಹೊರಗುಳಿಯದಂತೆ ಖಚಿತಪಡಿಸುವುದು ಕಾರ್ಯಕ್ರಮಗಳ ಉದ್ದೇಶವಾಗಿದೆ.
ಅಕ್ಟೋಬರ್ 9ರಂದು ಯಲಿಶಿರೂರು ಗ್ರಾ.ಪಂ ಕಾರ್ಯಾಲಯದಲ್ಲಿ ಬೆಳಿಗ್ಗೆ 10.30 ಗಂಟೆಗೆ, ಹರ್ತಿ ಗ್ರಾ.ಪಂ ಕಾರ್ಯಾಲಯದಲ್ಲಿ ಮಧ್ಯಾಹ್ನ 3 ಗಂಟೆಗೆ, ಅಕ್ಟೋಬರ್ 10ರಂದು ನಾಗಾವಿ ಗ್ರಾ.ಪಂ ಕಾರ್ಯಾಲಯದಲ್ಲಿ ಬೆಳಿಗ್ಗೆ 10.30 ಗಂಟೆಗೆ, ಕಳಸಾಪೂರ ಗ್ರಾ.ಪಂ ಕಾರ್ಯಾಲಯದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ.
ಕಾರ್ಯಕ್ರಮಗಳಲ್ಲಿ ಪಂಚಾಯಿತಿಯ ಜನಪ್ರತಿನಿಧಿಗಳು, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಐದು ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಅವರು ಸಾರ್ವಜನಿಕರ ಪ್ರಶ್ನೆಗಳಿಗೆ ನೇರವಾಗಿ ಸ್ಪಂದಿಸಿ, ಯೋಜನೆಗಳ ಪ್ರಯೋಜನಗಳ ಕುರಿತು ಮಾಹಿತಿ ನೀಡಲಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಿದ್ದು, ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಹಾಜರಾಗಿ, ಯೋಜನೆಗಳ ಉಪಯೋಗ ಪಡೆಯಲು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.