ಸತ್ಯದ ಜೊತೆ ದೈವಶಕ್ತಿ ಸದಾ ಇರುತ್ತದೆ: ರಂಭಾಪುರಿ ಶ್ರೀ

0
???????
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸತ್ಯ ಮನುಷ್ಯ ಜೀವನವನ್ನು ಬದಲಿಸುತ್ತದೆ. ನಮ್ಮ ನಡೆ-ನುಡಿಗಳು ಯಾವಾಗಲೂ ಸತ್ಯದ ಪರವಾಗಿರಬೇಕು. ಸುಳ್ಳಿನ ಜೊತೆ ದುಷ್ಟ ಶಕ್ತಿ ಇದ್ದರೆ, ಸತ್ಯದ ಜೊತೆ ದೈವ ಶಕ್ತಿ ಸದಾ ಇರುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

Advertisement

ಅವರು ಗುರುವಾರ ತಾಲೂಕಿನ ಮುಕ್ತಿಮಂದಿರ ಕ್ಷೇತ್ರದಲ್ಲಿ ಲಿಂ. ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳವರ 43ನೇ ವರ್ಷದ ಪುಣ್ಯ ಸ್ಮರಣೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ನೀತಿವಂತರು ನಿರಾಶರಾಗದೇ ನೋವು ನುಂಗಿ ನಲಿವನ್ನು ಹೊಂದಿ ಮುನ್ನಡೆಯಬೇಕು. ನೀತಿ ಸಂಹಿತೆ ಅರಿತವನಿಗೆ ನೆಮ್ಮದಿ ಸದಾ ಇರುತ್ತದೆ. ಬರುವ ಆತಂಕಗಳನ್ನು ಗಮನಿಸದೇ, ಅಂಜದೇ, ಅಳುಕದೇ ಲಿಂ. ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳು ಸತ್ಯ ಸಂಸ್ಕೃತಿ ಸಂವರ್ಧಿಸುವುದರಲ್ಲಿ ಶ್ರಮಸಿದ್ದನ್ನು ಯಾರೂ ಮರೆಯಲು ಸಾಧ್ಯವಿಲ್ಲ ಎಂದರು.

ನೇತೃತ್ವ ವಹಿಸಿದ್ದ ಮುಕ್ತಿಮಂದಿರ ಪಟ್ಟಾಧ್ಯಕ್ಷರಾದ ವಿಮಲ ರೇಣುಕ ಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ವಿಚಾರ ವಿಮರ್ಶೆಗಳು ಸಂಸ್ಕೃತಿಯ ಮೇಲೆ ಹೊಸ ಬೆಳಕು ಮೂಡಿಸಬೇಕೇ ಹೊರತು ಜನರನ್ನು ನಾಸ್ತಿಕರನ್ನಾಗಿ ಮಾಡಬಾರದು. ತಾಳ್ಮೆ ಮತ್ತು ಸಹನೆಯ ಗುಣಗಳು ಮನುಷ್ಯನಲ್ಲಿ ಇಲ್ಲದಿರುವುದೇ ಇಂದಿನ ಅಶಾಂತಿ ಮತ್ತು ಅತೃಪ್ತಿಗಳಿಗೆ ಕಾರಣ. ಲಿಂ. ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳವರ ಸಂಕಲ್ಪದಂತೆ ತ್ರಿಕೋಟಿ ಶಿವಲಿಂಗ ಪ್ರತಿಷ್ಠಾಪನೆಯ ಕಾಲ ಈಗ ಕೂಡಿ ಬರುತ್ತಿದ್ದು, ಈ ಮಹತ್ಕಾರ್ಯಕ್ಕಾಗಿ ತಮ್ಮೆಲ್ಲರ ಸೇವೆ ಸದಾ ಮೀಸಲಾಗಿರಲಿ ಎಂದರು.

ಸಮಾರಂಭ ಉದ್ಘಾಟಿಸಿದ ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಶಾಮನೂರ ಮಾತನಾಡಿ, ಪರಮ ಪೂಜ್ಯ ಲಿಂ. ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳವರ 43ನೇ ವರ್ಷದ ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುವ ಸೌಭಾಗ್ಯ ಪ್ರಾಪ್ತವಾಗಿರುವುದು ಪೂರ್ವಾರ್ಜಿತ ಪುಣ್ಯದ ಫಲವೆಂದು ಭಾವಿಸುವೆ. ‘ಮಾನವ ಧರ್ಮಕ್ಕೆ ಜಯವಾಗಲಿ – ಧರ್ಮದಿಂದಲೇ ವಿಶ್ವಕ್ಕೆ ಶಾಂತಿ’ ಎಂಬ ಸಂದೇಶ ನಾಡಿನ ಜನಮನದಲ್ಲಿ ಸದಾ ಹಸಿರಾಗಿದೆ. ಅವರ ತಪೋಶಕ್ತಿ ನಮ್ಮೆಲ್ಲರನ್ನು ಸನ್ಮಾರ್ಗಕ್ಕೆ ಕೊಂಡೊಯ್ಯಲೆಂದು ಪ್ರಾರ್ಥಿಸಿದರು.
ಎಮ್ಮಿಗನೂರು ವಾಮದೇವ ಮಹಾಂತ ಶಿವಾಚಾರ್ಯರು ಲಿಂ. ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳವರ ಜೀವನದ ಸಿದ್ಧಿ ಸಾಧನೆಗಳನ್ನು ಕುರಿತು ಉಪದೇಶಾಮೃತವನ್ನಿತ್ತರು.

ಬಂಕಾಪುರ ರೇವಣಸಿದ್ಧ ಶಿವಾಚಾರ್ಯರು, ಸುಳ್ಳ (→ ಸುಳ) ಶಿವಸಿದ್ಧರಾಮೇಶ್ವರ ಶಿವಾಚಾರ್ಯರು, ಬನ್ನಿಕೊಪ್ಪ ಸುಜ್ಞಾನದೇವ ಶಿವಾಚಾರ್ಯರು, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯರು, ಮಳಲಿಮಠದ ಡಾ. ನಾಗಭೂಷಣ ಶಿವಾಚಾರ್ಯರು, ಚಳಗೇರಿ ವೀರಸಂಗಮೇಶ್ವರ ಶಿವಾಚಾರ್ಯರು, ಕಲಘಟಗಿ ರೇವಣಸಿದ್ಧೇಶ್ವರ ಶಿವಾಚಾರ್ಯರು, ಸವದತ್ತಿ ಮಲ್ಲಿಕಾರ್ಜುನ ಶಿವಾಚಾರ್ಯರು, ಶಿರಕೋಳ ಗುರುಸಿದ್ಧೇಶ್ವರ ಶಿವಾಚಾರ್ಯರು, ಗಿರಿಸಾಗರ ರುದ್ರಮುನಿ ಶಿವಾಚಾರ್ಯರು, ಬಿಲ್ವಕೆರೂರು ಸಿದ್ಧಲಿಂಗ ಶಿವಾಚಾರ್ಯರು, ಪುಣ್ಯಕೋಟಿ ಮಠದ ಜಗದೀಶ್ವರ ಸ್ವಾಮಿಗಳು, ಲಕ್ಷ್ಮೇಶ್ವರದ ಮಳೆಮಲ್ಲಿಕಾರ್ಜುನ ಶಿವಾಚಾರ್ಯರು, ಶಿವಗಂಗೆ ಮಲಯ ಶಾಂತಮುನಿ ಶಿವಾಚಾರ್ಯರು, ನಾಗಣಸೂರು ಶ್ರೀಕಂಠ ಶಿವಾಚಾರ್ಯರು, ಕಲಾದಗಿ ಗಂಗಾಧರ ಶಿವಾಚಾರ್ಯರು, ಮಂಗಳೂರು ಸಿದ್ಧಲಿಂಗ ಶಿವಾಚಾರ್ಯರು ಪಾಲ್ಗೊಂಡಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ನೊಣವಿನಕೆರೆ ಡಾ. ಕರಿವೃಷಭ ಶಿವಯೋಗೀಶ್ವರ ಸ್ವಾಮಿಗಳು ವಹಿಸಿದ್ದರು. ಸಮಾರಂಭಕ್ಕೂ ಮುನ್ನ ಲಿಂ. ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಸಂಭ್ರಮದಿಂದ ಜರುಗಿತು. ಬಾಳೆಹೊನ್ನೂರು ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ, ವಿಠಲಾಪುರ ಹಿರೆಮಠದ ಗಂಗಾಧರಸ್ವಾಮಿ ಅವರಿಂದ ಭಕ್ತಿ ಗೀತೆ ಜರುಗಿತು. ಸವಣೂರಿನ ಡಾ. ಗುರುಪಾದಯ್ಯ ಸಾಲಿಮಠ ನಿರೂಪಿಸಿದರು. ಮಲೆಬೆನ್ನೂರಿನ ಸದ್ಭಕ್ತರು ಅನ್ನದಾಸೋಹ ನೆರವೇರಿಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಶಾಮನೂರು ಶಿವಶಂಕರಪ್ಪನವರಿಗೆ ಕೊಡಮಾಡಿದ ‘ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಪ್ರಶಸ್ತಿ’ಯನ್ನು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಶ್ರೀ ರಂಭಾಪುರಿ ಜಗದ್ಗುರುಗಳಿಂದ ಸ್ವೀಕರಿಸಿದರು. ಮುಖ್ಯ ಅತಿಥಿಗಳಾಗಿ ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕರಾದ ಜಿ.ಎಸ್. ಗಡ್ಡದ್ದೇವರಮಠ, ರಾಮಕೃಷ್ಣ ದೊಡ್ಡಮನಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

“ಬದುಕಿ ಬಾಳುವ ಜೀವಾತ್ಮರಿಗೆ ಭಗವಂತ ಕೊಟ್ಟ ಕೊಡುಗೆ ಅಮೂಲ್ಯ.
ಅರಿವುಳ್ಳ ಮಾನವ ಜನ್ಮ ಸಾರ್ಥಕಪಡಿಸಿಕೊಳ್ಳಲು ಶ್ರಮ ಮತ್ತು ಸಾಧನೆ ಅವಶ್ಯಕ.
ಒಳ್ಳೆಯ ಕಾರ್ಯ ಮಾಡುವಾಗ ಎಡರು-ತೊಡರುಗಳು ಮಹಾತ್ಮರಿಗೂ ಬಿಟ್ಟಿಲ್ಲ.
ಒಳ್ಳೆಯವರಿಗೆ ಇರುವಷ್ಟು ವೈರಿಗಳು ದುರ್ಜನರಿಗೆ ಇರುವುದಿಲ್ಲ.
ದುರ್ಜನರಿಗೆ ಇರುವಷ್ಟು ಸ್ನೇಹಿತರು ಒಳ್ಳೆಯವರಿಗೆ ಇರುವುದಿಲ್ಲ.
ಮೌಲ್ಯಗಳ ಉಳಿವು–ಅಳಿವು ಮಾನವನ ಆಚರಣೆಯಲ್ಲಿವೆ”
ಡಾ. ವೀರಸೋಮೇಶ್ವರ ಜಗದ್ಗುರುಗಳು,
ಶ್ರೀ ರಂಭಾಪುರಿ ಪೀಠ, ಬಾಳೆಹೊನ್ನೂರು.


Spread the love

LEAVE A REPLY

Please enter your comment!
Please enter your name here