ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಮತಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರಿಗೆ ಕಾಂಗ್ರೆಸ್ ಸರಕಾರ ಸಚಿವ ಸ್ಥಾನ ನೀಡದಿದ್ದರೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ಅಭಿಷೇಕ ನವಲಗುಂದ ಹೇಳಿದರು.
ಅವರು ಶನಿವಾರ ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,
ಶಾಸಕ ಜಿ.ಎಸ್. ಪಾಟೀಲ ರಾಜ್ಯ ಕಂಡ ಅಪ್ರತಿಮ ನಾಯಕರು. ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿರುವ ಮಹಾನ್ ವ್ಯಕ್ತಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ರಾಜ್ಯದಲ್ಲಿ ಎಲ್ಲ ಸಮುದಾಯಗಳನ್ನು ಏಕತೆಯಿಂದ ಕಾಣುವ ಚೇತನ ಜಿ.ಎಸ್. ಪಾಟೀಲರಾಗಿದ್ದು, ಇವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು. ಇದು ಬರಿ ರೋಣ ಮತಕ್ಷೇತ್ರದ ಕೂಗಲ್ಲ, ರಾಜ್ಯದ ಕೂಗಾಗಿದೆ ಎಂದರು.
ಕಳೆದ 50 ವರ್ಷಗಳಿಂದ ಶಾಸಕ ಜಿ.ಎಸ್. ಪಾಟೀಲ ಕುಟುಂಬದ ಎಲ್ಲ ಸದಸ್ಯರು ಕಾಂಗ್ರೆಸ್ ಪಕ್ಷದ ಕಟ್ಟಾಳುಗಳಂತೆ ವಿಶ್ವಾಸದಿಂದ ಪಕ್ಷವನ್ನು ಜಿಲ್ಲೆಯಲ್ಲಿ ಕಟ್ಟಿದ್ದಾರೆ. ಮುಖ್ಯವಾಗಿ ಜಿ.ಎಸ್. ಪಾಟೀಲರಿಗೆ ಪಕ್ಷದ ಹೈಕಮಾಂಡ್ ನೀಡಿದ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಇದು ಪಕ್ಷದ ವರಿಷ್ಠರಿಗೂ ತಿಳಿದಿರುವ ಸಂಗತಿ. ಪಕ್ಷದ ನಾಯಕರು ಶಾಸಕ ಜಿ.ಎಸ್. ಪಾಟೀಲರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಅವರಿಗೆ ಈ ಬಾರಿ ಸಚಿವ ಸ್ಥಾನವನ್ನು ನೀಡಬೇಕು. ಇಲ್ಲದಿದ್ದರೆ ಸಾವಿರಾರು ಕಾರ್ಯಕರ್ತರು ಉಪವಾಸ ಸತ್ಯಾಗ್ರಹದೊಂದಿಗೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.



