ಬೆಂಗಳೂರು:- ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ 247ನೇ ಜಯಂತ್ಯೋತ್ಸವ ಹಾಗೂ 201ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್ ಭವನದ ಪ್ರೇರಣಾ ಸ್ಥಳದಲ್ಲಿ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಅವರ ನೇತೃತ್ವದಲ್ಲಿ ರಾಣಿ ಚೆನ್ನಮ್ಮನವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ಸೋಮಣ್ಣ, ಬೈಲಹೊಂಗಲದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮನವರ ಸಮಾಧಿಯನ್ನು ಅಭಿವೃದ್ಧಿಪಡಿಸಿ, ಅದನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ಈ ಕುರಿತು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ಮತ್ತು ನೆರವು ನೀಡಬೇಕು ಎಂದು ಕೇಳಿಕೊಂಡಿದ್ದಾರೆ. “ಕಿತ್ತೂರು ಸಂಸ್ಥಾನದ ಕೋಟೆ-ಕೊತ್ತಲೆಗಳನ್ನು ಸಮರ್ಪಕವಾಗಿ ಸಂರಕ್ಷಿಸಬೇಕು. ರಾಣಿ ಚೆನ್ನಮ್ಮನವರ ಸಾಹಸಗಾಥೆ ಮತ್ತು ಜೀವನವನ್ನು ಎಲ್ಲಾ ಭಾರತೀಯ ಭಾಷೆಗಳಲ್ಲಿ ಪುಸ್ತಕ ರೂಪದಲ್ಲಿ ಪ್ರಕಟಿಸುವ ಕ್ರಮ ಸರ್ಕಾರ ಕೈಗೊಳ್ಳಬೇಕು,” ಎಂದು ತಿಳಿಸಿದ್ದಾರೆ.
“ರಾಣಿ ಚೆನ್ನಮ್ಮ ನಾಡು, ನುಡಿ ಮತ್ತು ಸ್ವಾಭಿಮಾನದ ಸಂಕೇತ. ಅವರ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ,” ಎಂದು ತಿಳಿಸಿದ್ದಾರೆ.
ವಿಜಯೋತ್ಸವ ಕಾರ್ಯಕ್ರಮದಲ್ಲಿ ದೆಹಲಿಯ ಕನ್ನಡಿಗರು, ಪರಮಪೂಜ್ಯ ಸ್ವಾಮೀಜಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿ ರಾಣಿ ಚೆನ್ನಮ್ಮನವರ ತ್ಯಾಗ ಮತ್ತು ಶೌರ್ಯವನ್ನು ಸ್ಮರಿಸಿದರು.