ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 50 ವರ್ಷಗಳ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಎಸ್.ಎಸ್. ಕಲ್ಮನಿ ಹಾಗೂ ನರೇಗಾ ಯೋಜನೆಯ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯ ಅಧಿಕಾರಿ ಎಸ್.ಎಚ್. ಕಿರಣಕುಮಾರ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಕೆಎಸ್ಪಿಸಿಬಿಯ ಸುವರ್ಣ ಮಹೋತ್ಸವ ರಾಜ್ಯಾದ್ಯಂತ ಅಕ್ಟೋಬರ್ 10ರಿಂದ ನವೆಂಬರ್ 19ರವರೆಗೆ ಆಚರಣೆಯಲ್ಲಿದ್ದು, ಪರಿಸರ ಜಾಗೃತಿ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ಗದಗ ಜಿಲ್ಲೆಗೆ ರಾಷ್ಟ್ರ ಮಟ್ಟದಲ್ಲಿ ಜಲಸಂಚಯ, ಜಲಭಾಗಿದಾರಿ ಪ್ರಶಸ್ತಿ ಪಡೆದುಕೊಂಡ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ಲಭಿಸಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸುವರ್ಣ ಮಹೋತ್ಸವದ ನಿಮಿತ್ತ ನೀಡಲಾಗುತ್ತಿರುವ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗೆ ಆಯ್ಕೆ ಮಾಡಿ ಈ ಪ್ರಶಂಸನಾ ಪತ್ರ ಪ್ರದಾನಿಸಲಾಗಿದೆ. ಪರಿಸರ ಜಾಗೃತಿಯನ್ನು ಉತ್ತೇಜಿಸುವ ಮತ್ತು ಮಾಲಿನ್ಯಮುಕ್ತ ಕರ್ನಾಟಕದ ನಿರ್ಮಾಣದ ಗುರಿಯ ಸಂದೇಶ ಸಾರುವಲ್ಲಿ ತಮ್ಮ ಸಕ್ರಿಯ ಕಾರ್ಯವೈಖರಿಯನ್ನು ಈ ಮೂಲಕ ಶ್ಲಾಘಿಸುತ್ತೇವೆ ಎಂದು ಪ್ರಶಸ್ತಿ ಪತ್ರದಲ್ಲಿ ತಿಳಿಸಲಾಗಿದೆ.
ಕಾರ್ಯಕ್ರಮದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು, ಸ್ಥಳೀಯ ಶಾಸಕರು, ಧಾರವಾಡ ಮಟ್ಟದ ಅಧಿಕಾರಿಗಳು, ಕೆಎಸ್ಪಿಸಿಬಿ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.



