ಬೀದರ್:- ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ದೇವರ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಜರುಗಿದೆ.
ರಾಚಪ್ಪ, ನವೀನ್, ಕಾಶೀನಾಥ್ ಮತ್ತು ನಾಗರಾಜ್ ಮೃತರು. ಇವರು ತೆಲಂಗಾಣ ಮೂಲದ ಜಗನ್ನಾಥಪುರ ಗ್ರಾಮದವರು ಎನ್ನಲಾಗಿದೆ. ಕಾರು ಮತ್ತು ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿದ್ದ ಇಬ್ಬರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳವಾರ ಜಗನ್ನಾಥಪುರದಿಂದ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ಹೋಗಿದ್ದು, ಬುಧವಾರ ದೇವರ ದರ್ಶನ ಮುಗಿಸಿ ವಾಪಸ್ ಜಗನ್ನಾಥಪುರಕ್ಕೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


