ಬೆಂಗಳೂರು/ಹಾಸನ:- ನಾಳೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಕರ್ನಾಟಕಕ್ಕೆ ಮೊದಲ ಭೇಟಿ ನೀಡಲಿದ್ದಾರೆ.
ಭೇಟಿ ವೇಳೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ 4ನೇ ಬೆಟ್ಟದ ಪದನಾಮ ಅನಾವರಣ ಹಾಗೂ ಆಚಾರ್ಯ ಶ್ರೀ 108ನೇ ಶಾಂತಿಸಾಗರ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಮಹೋತ್ಸವ ಉದ್ಘಾಟಿಸಲಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿರಲಿದ್ದಾರೆ.
ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಅಂಗ ಸಂಸ್ಥೆಯಾಗಿರುವ ಮೈಸೂರಿನಲ್ಲಿರುವ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಹದಿನಾರನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪದವಿ ಪಡೆದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸುತ್ತೂರು ಮಠದ ಹಳೆಯ ಆವರಣಕ್ಕೂ ಉಪರಾಷ್ಟ್ರಪತಿ ಅವರು ಭೇಟಿ ನೀಡಲಿದ್ದಾರೆ. ಅವರು ಮೈಸೂರಿನ ಬಳಿಯ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನ ಮತ್ತು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿರುವ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಾಳೆ ಬೆಳಗ್ಗೆ 8:45 ಕ್ಕೆ ಶ್ರವಣಬೆಳಗೊಳದ ಹೆಲಿಪ್ಯಾಡ್ಗೆ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಆಗಮಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸಚಿವ ಡಿ.ಸುಧಾಕರ್, ಸಂಸದ ಶ್ರೇಯಸ್ ಪಟೇಲ್, ಸ್ಥಳೀಯ ಶಾಸಕ ಸಿ.ಎನ್.ಬಾಲಕೃಷ್ಣ ಸ್ವಾಗತಿಸಲಿದ್ದಾರೆ


