ವಿಜಯಸಾಕ್ಷಿ ಸುದ್ದಿ, ಮೈಸೂರು
ತಮಿಳುನಾಡಿನಲ್ಲಿ ನೀರಿನ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತದೆ. ನೀರಿನ ರಾಜಕೀಯ ಮಾಡಿಯೇ ಹಲವರು ಅಧಿಕಾರಕ್ಕೆ ಬಂದಿದ್ದಾರೆ. ನದಿಯ ನೀರು ರೈತರಿಗೆ, ಜನರಿಗೆ ಅನುಕೂಲ ಆಗಬೇಕು. ನೀರಿನ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಕೆದಾಟು ವಿಚಾರದಲ್ಲಿ ಕೆಲವು ಪ್ರಕ್ರಿಯೆ ಮುಗಿಯಬೇಕಿದೆ. ಡಿಪಿಆರ್ ಸಿದ್ಧಗೊಂಡಿದೆ. ಶೀಘ್ರದಲ್ಲೇ ವಕೀಲರೊಂದಿಗೆ ದೆಹಲಿಗೆ ತೆರಳಿ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡುತ್ತೇನೆ. ಮೇಕೆದಾಟು ಯೋಜನೆ ಜಾರಿಮಾಡುವುದು ಶತಸಿದ್ಧ ಎಂದರು.
ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫೂ ಬಗ್ಗೆ ಮಾಹಿತಿ ಪಡೆಯುತ್ತೇನೆ. ನಾನೇ ಗಡಿ ಜಿಲ್ಲೆಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿ ಪರಿಶೀಲಿಸುವೆ. ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ವಿಶೇಷ ಸಂದರ್ಭದಲ್ಲಿ ಸಂಪುಟ ರಚನೆಯಾಗಿದೆ. ಸಂಪುಟ ರಚನೆ ಆಗಿದೆ. ಈ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ರಾಮದಾಸ್ ನನ್ನ ಸ್ನೇಹಿತ ಕರೆದು ಮಾತನಾಡುತ್ತೇನೆ ಎಂದರು.