ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಅಮಾಯಕರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳವಾರ ರಾತ್ರಿಯಿಂದ ಶಿರಹಟ್ಟಿ ಪೊಲೀಸ್ ಠಾಣೆ ಎದುರುಗಡೆ ನಡೆಯುತ್ತಿದ್ದ ಅಹೋರಾತ್ರಿ ಪ್ರತಿಭಟನೆಯು ಬುಧವಾರ ಸಂಜೆ ತಹಸೀಲ್ದಾರ ರಾಘವೇಂದ್ರರಾವ್ ಕೆ ಅವರಿಗೆ ಮನವಿ ಸಲ್ಲಿಸುವುದರ ಮೂಲಕ ಅಂತ್ಯವಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಿವು ಲಮಾಣಿ, ನಾಗರಾಜ ಲಕ್ಕುಂಡಿ, ಶಂಕರ ಮರಾಠೆ, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪ್ರಕರಣ ದಾಖಲಿಸಿದ್ದು, ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರಾದ ಪಿಎಸ್ಐ ಈರಪ್ಪ ರಿತ್ತಿ ಮತ್ತು ಪೊಲೀಸ್ ಸಿಬ್ಬಂದಿಗಳಾದ ಮೇಘರಾಜ್, ಮಲ್ಲಿಕಾರ್ಜುನ ವಡ್ಡರ ಇವರನ್ನು ಕೂಡಲೇ ಬಂಧಿಸಿ ತ್ವರಿತಗತಿಯಲ್ಲಿ ಪ್ರಕರಣವನ್ನು ಕೈಗೊಂಡು ಕಾನೂನಾತ್ಮಕವಾಗಿ ಕ್ರಮ ಜರುಗಿಸಿ ಹಲ್ಲೆಗೊಳಗಾದವರಿಗೆ ಕೂಡಲೇ ನ್ಯಾಯವನ್ನು ಒದಗಿಸಬೇಕು. ನ.17ರ ಸೋಮವಾರದೊಳಗೆ ಕ್ರಮವನ್ನು ಕೈಗೊಳ್ಳದಿದ್ದರೆ ಉಗ್ರ ಹೋರಾಟವನ್ನು ಕೈಗೊಳ್ಳುತ್ತೇವೆಂದು ಮನವಿಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿ.ಡಿ. ಪಲ್ಲೇದ, ಜಾನು ಲಮಾಣಿ, ಶಂಕರ ಮರಾಠೆ, ಫಕ್ಕೀರೇಶ ರಟ್ಟಿಹಳ್ಳಿ, ತಿಮ್ಮರಡ್ಡಿ ಮರಡ್ಡಿ, ಮೋಹನ ಗುತ್ತೆಮ್ಮನವರ, ನಂದಾ ಪಲ್ಲೇದ, ಪುಂಡಲೀಕ ಲಮಾಣಿ, ಗಂಗಾಧರ ಮೆಣಸಿನಕಾಯಿ ಮುಂತಾದವರು ಉಪಸ್ಥಿತರಿದ್ದರು.


