ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಯಿಂದ ನವೆಂಬರ್ 14ರಂದು ಬೆಳಿಗ್ಗೆ 11 ಗಂಟೆಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಜಿಲ್ಲಾದ್ಯಂತ ಏಕಕಾಲದಲ್ಲಿ 2025-26ನೇ ಸಾಲಿನ ಪೋಷಕ-ಶಿಕ್ಷಕರ ಮಹಾಸಭೆಯನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು, ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಭಾಗವಹಿಸುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಕೋರಿದ್ದಾರೆ.
ಶಾಲೆಯು ಸಮುದಾಯದ ಒಂದು ಭಾಗವಾಗಿದ್ದು, ಭಾಗೀದಾರರು ಹಾಗೂ ಪೋಷಕರ ವಿಶ್ವಾಸ ಮತ್ತು ಸಹಕಾರವು ಸರ್ಕಾರಿ ಶಾಲಾ-ಕಾಲೇಜುಗಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತವೆ. ರಾಷ್ಟ್ರ ನಿರ್ಮಾಣ ಮತ್ತು ಚೈತನ್ಯಶೀಲ ಸಮಾಜ ನಿರ್ಮಾಣದ ಸಹಕಾರಕ್ಕಾಗಿ ಅರ್ಹ ವಯೋಮಾನದ ಎಲ್ಲಾ ಮಕ್ಕಳು ಶಾಲೆಗೆ ದಾಖಲಾಗಿ ನಿರಂತರವಾಗಿ ಹಾಜರಾಗಿ ಗುಣಮಟ್ಟದ ಶಿಕ್ಷಣ ಪಡೆಯುವುದು ಅತ್ಯಗತ್ಯವಾಗಿದೆ.
ಮಕ್ಕಳ ಕಲಿಕೆಯು ಶಾಲೆ, ಮನೆ ಮತ್ತು ಸಮಾಜಗಳ ನಡುವೆ ನಿರಂತರ ಸಂಪರ್ಕ ಕಲ್ಪಿಸುತ್ತದೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಅವರನ್ನು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಸಿ.ಎನ್. ಶ್ರೀಧರ ಹೇಳಿದ್ದಾರೆ.
ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗಿ ಸರ್ಕಾರದಿಂದ ಅನುಷ್ಠಾನಗೊಳಿಸಲಾಗುತ್ತಿರುವ ಉಪಕ್ರಮಗಳು ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವುದು ಪೋಷಕ-ಶಿಕ್ಷಕ ಸಭೆಗಳ ಉದ್ದೇಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯ ಮೂಲಕ ಕೋರಿದ್ದಾರೆ.


