ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಕೊರೊನಾ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೊರೊನಾ ನಿರ್ವಹಣೆ ಕುರಿತಾಗಿ ತಜ್ಞರೊಂದಿಗೆ ಬೆಂಗಳೂರಿನಲ್ಲಿಂದು ನಡೆಸಿದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆ ಆರಂಭಿಸದಿರಲು ನಿರ್ಧರಿಸಲಾಗಿದೆ. ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಸೆ.23ರಿಂದ 8ರಿಂದ 12ನೇ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ.
ಪೋಷಕರು, ಮಕ್ಕಳು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಶಾಲೆ ಆರಂಭವಾದ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಾದಲ್ಲಿ ಒಂದು ವಾರಗಳ ಕಾಲ ಶಾಲೆ ಬಂದ್ ಮಾಡಿ ಸಂಪೂರ್ಣ ಸ್ಯಾನಿಟೈಜೇಶನ್ ಮಾಡಿ ಬಳಿಕ ಶಾಲೆ ಆರಂಭಿಸಲಾಗುವುದು ಎಂದು ಹೇಳಿದರು.
ಕೊರೊನಾ ಎರಡನೇ ಅಲೆ ಇನ್ನೂ ಸಂಪೂರ್ಣ ಹೋಗಿಲ್ಲ. ಈಗಲೂ ಪ್ರತಿದಿನ 2 ಸಾವಿರಕ್ಕಿಂತ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ. ಹಾಗಾಗಿ ಮುಂದಿನ ಎರಡು ವಾರಗಳ ಕಾಲ ಈಗಿರುವ ನಿಯಮಗಳೇ ಮುಂದುವರಿಯಲಿವೆ.
ಕೊರೊನಾ ನಿರ್ವಹಣೆಗೆ ಬಹಳ ಎಚ್ಚರಿಕೆಯಿಂದ ಕ್ರಮ ಕೈಗೊಳ್ಳಬೇಕಿದೆ. ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಟೆಸ್ಟಿಂಗ್ ಹಾಗೂ ವ್ಯಾಕ್ಸಿನೇಶನ್ ಹೆಚ್ಚಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ವಿಶೇಷವಾಗಿ ಗ್ರಾಮಾಂತರ ಪ್ರದೇಶದಲ್ಲಿ ಟೆಸ್ಟಿಂಗ್ ಹೆಚ್ಚಿಸಲು ನಿರ್ಧರಿಸಲಾಗಿದೆ. ಕೇರಳ, ಮಹಾರಾಷ್ಟ್ರ ಗಡಿಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕೊರೊನಾ ಡೆಲ್ಟಾ ವೇರಿಯೇಶನ್ ಕಂಡು ಹಿಡಿಯಲು ಮುಂದಿನ ಮೂರು ವಾರಗಳಲ್ಲಿ ರಾಜ್ಯದ ಆರು ಕಡೆ ಜಿನೋಮ್ ಲ್ಯಾಬ್ ಆರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.