ವಿಜಯಸಾಕ್ಷಿ ಸುದ್ದಿ, ಗದಗ: ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಕೇವಲ ಪುಸ್ತಕದಲ್ಲಿರಬಾರದು. ಅದರ ಅನುಷ್ಠಾನದ ಜವಾಬ್ದಾರಿ ನಮ್ಮ ಮೇಲಿದೆ. ದೌರ್ಜನ್ಯ ಪೀಡಿತರ ಮನಸ್ಸಿನಲ್ಲಿ ಭಯವಲ್ಲ, ಭರವಸೆ ಮೂಡುವಂತೆ ಪೊಲೀಸ್ ಮತ್ತು ಆಡಳಿತ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗುರುವಾರ ಜರುಗಿದ ಗದಗ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸೂಕ್ತ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ, ಪ್ರಾಥಮಿಕ ತನಿಖೆಯ ಹಂತ, ಚಾರ್ಜ್ಶೀಟ್ ಸಲ್ಲಿಕೆ, ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ವಿವರಗಳನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಂದಾ ಹಣಬರಟ್ಟಿ ಸಭೆಗೆ ಮಂಡಿಸಿದರು.
ಎಸ್ಸಿ/ಎಸ್ಟಿ ಕಾಯ್ದೆ, ಪರಿಹಾರ ನಿಬಂಧನೆಗಳು, ದೂರನ್ನು ಹೇಗೆ ಸಲ್ಲಿಸಬೇಕು, ಯಾರನ್ನು ಸಂಪರ್ಕಿಸಬೇಕು ಎಂಬ ವಿಷಯದಲ್ಲಿ ಜನರಿಗೆ ತಿಳುವಳಿಕೆ ಕೊಡಿ. ಶಾಲೆ-ಕಾಲೇಜುಗಳಲ್ಲಿ ಸಂವಿಧಾನ ಮೌಲ್ಯಗಳ ಕುರಿತು ವಿಶೇಷ ವ್ಯಾಖ್ಯಾನ ಕಾರ್ಯಕ್ರಮಗಳನ್ನು ನಡೆಸಿ, ಜಾತಿ ಆಧಾರಿತ ದ್ವೇಷ ತಡೆಯುವ ಮನೋಭಾವ ಬೆಳೆಸಬೇಕು ಎಂದು ಡಿಸಿ ಸಿ.ಎನ್. ಶ್ರೀಧರ ಹೇಳಿದರು.
ಸಭೆಯಲ್ಲಿ ದೂರನ್ನು ಸ್ವೀಕರಿಸುವ ಪೊಲೀಸ್ ಠಾಣೆ, ತಹಸೀಲ್ದಾರ ಕಚೇರಿ, ಸಮಾಜ ಕಲ್ಯಾಣ ಕಚೇರಿ ಮುಂತಾದ ಕಡೆಗಳಲ್ಲಿ ದೂರವಾಣಿ ಸಂಖ್ಯೆಗಳು, ತುರ್ತು ಸಂಪರ್ಕ ವಿವರಗಳನ್ನು ಗೋಚರವಾಗುವಂತೆ ಅಂಟಿಸುವಂತೆ ಸೂಚಿಸಲಾಯಿತು. ಸಮಿತಿಯ ಸದಸ್ಯರ ಕೋರಿಕೆಯ ಮೇರೆಗೆ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಸಹ ದೌರ್ಜನ್ಯ ನಿಯಂತ್ರಣ ಸಭೆಗಳು ಆಗಬೇಕು, ಈ ಬಗ್ಗೆ ಸಮಾಜ ಕಲ್ಯಾಣ ಅಧಿಕಾರಿಗಳು ಕ್ರಮ ವಹಿಸಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳಾದ ಶರೀಫ್ ಬಿಳೆಯಲಿ, ಸುರೇಶ್ ನಡುವಿನಮನಿ, ವಿನಾಯಕ ಬಳ್ಳಾರಿ, ತುಕ್ಕಪ್ಪ ಪೂಜಾರ, ಶ್ರೀನಿವಾಸ ದ್ಯಾವನೂರ, ದೃವರಾಜ ಹೊನ್ನಪ್ಪನವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಹಬೂಬ ತುಂಬರಮಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಡಿಎಚ್ಒ ಡಾ. ಎಸ್.ಎಸ್. ನೀಲಗುಂದ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಶರಣು ಗೋಗೆರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಪ.ಜಾ ಪ.ಪಂ ಜನರಿಗೆ ತಲುಪಬೇಕಾದ ವಸತಿ, ವೈದ್ಯಕೀಯ, ಶಿಕ್ಷಣ ಸೇರಿದಂತೆ ವಿವಿಧ ಸೌಲಭ್ಯಗಳು ಅರ್ಹರಿಗೆ ಸಕಾಲದಲ್ಲಿ ದೊರಕಬೇಕು. ಹೊಂಬಳ ನಾಕಾದ ಸ್ಮಶಾನ ಭೂಮಿಯಲ್ಲಿ ಬೆಳೆದಿರುವ ಮುಳ್ಳಿನ ಕಂಟಿಗಳನ್ನು ತೆಗೆದು ಸ್ವಚ್ಛಗೊಳಿಸಿ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಬೇಕು. ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಗೆ ಅಧಿಕಾರಿಗಳು ತಪ್ಪದೇ ಸಕಾಲದಲ್ಲಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಕಟ್ಟುನಿಟ್ಟಿನ ಸೂಚನೆ ನೀಡಿದರು.


