ವಿಜಯಸಾಕ್ಷಿ ಸುದ್ದಿ, ಗದಗ: ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಲು ಕೇಂದ್ರ ಸರ್ಕಾರವು ನವೆಂಬರ್ 13ರಂದೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಅನುಮತಿ ನೀಡಿದ್ದರೂ, ಈ ವಿಷಯವನ್ನು ಮುಚ್ಚಿಟ್ಟು ರೈತರನ್ನು ಸಂಕಷ್ಟಕ್ಕೆ ದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.
ಮಂಗಳವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದರೂ ಈವರೆಗೆ ಖರೀದಿ ಕೇಂದ್ರಗಳನ್ನು ತೆರೆದಿಲ್ಲ. ಆಡಳಿತದಲ್ಲಿ ಬಿಕ್ಕಟ್ಟು ಎದುರಾದಾಗ ಆವರ್ತನಿಧಿ ಬಳಸಿ ರೈತ ಉತ್ಪನ್ನಗಳನ್ನು ಖರೀದಿಸಿ, ನಂತರ ಕೇಂದ್ರದಿಂದ ಮರುಪಾವತಿ ಪಡೆಯುವ ಅವಕಾಶವಿದ್ದರೂ ರಾಜ್ಯ ಸರ್ಕಾರ ಅದನ್ನು ಬಳಸುತ್ತಿಲ್ಲ. ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಆವರ್ತನಿಧಿ ಶೂನ್ಯವಾಗಿದೆ. ಗ್ಯಾರಂಟಿಗಳ ನೆಪದಲ್ಲಿ ರೈತ ವರ್ಗಕ್ಕೆ ಸರ್ಕಾರ ಮೋಸ ಮಾಡುತ್ತಿದೆ ಎಂದು ಆಪಾದಿಸಿದರು.
ಈ ಹಿಂದೆ ಹಾನಿಗೊಳಗಾದ ಹೆಸರು ಉತ್ಪನ್ನವನ್ನು ಖರೀದಿಸಲು ಕೂಡ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ಸಲಹೆ ನೀಡಿದ್ದರೂ ರಾಜ್ಯ ಸರ್ಕಾರ ಅದನ್ನು ಕಳುಹಿಸಲಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಜೋಳ, ಮೆಕ್ಕೆಜೋಳ, ಹೆಸರು ಸೇರಿದಂತೆ ವಿವಿಧ ಉತ್ಪನ್ನಗಳ ಬೆಂಬಲ ಬೆಲೆಯನ್ನು 1 ಸಾವಿರದಿಂದ 3 ಸಾವಿರ ರೂ.ವರೆಗೆ ಹೆಚ್ಚಿಸಲಾಗಿದೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಕೇಂದ್ರದಿಂದ ಅನುಮತಿ ಸಿಕ್ಕಿದ್ದರೂ ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ರೈತರನ್ನು ವಂಚಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳಲ್ಲಿ ಕೇವಲ ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದೆ. ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರಿಗೆ ಸ್ಪಂದಿಸುತ್ತಿಲ್ಲ. ಸರ್ಕಾರ ದಾರಿ ತಪ್ಪಿದೆ. ನಾನು ಸಿಎಂ ಆಗಿದ್ದಾಗ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತರೊಂದಿಗೆ ಸಭೆ ನಡೆಸುತ್ತಿದ್ದೆ. ಈಗ ಆ ಸಕಾರಾತ್ಮಕ ಬೆಳವಣಿಗೆ ಕಾಣುತ್ತಿಲ್ಲ. ಅಧಿಕಾರದ ದುರಾಸೆಯಿಂದ ಸರ್ಕಾರ ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ವಿ.ಪಿ ಸದಸ್ಯ ಎಸ್.ವಿ. ಸಂಕನೂರ, ಮಾಜಿ ಸಚಿವ ಕಳಕಪ್ಪ ಬಂಡಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಶಿವು ಹಿರೇಮನಿ ಪಾಟೀಲ, ಲಿಂಗರಾಜ ಪಾಟೀಲ, ಕೋಟಿಗೌಡರ್ ಇತರರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣದ ಕುರಿತು ಮಾತನಾಡಿದ ಜಗದೀಶ ಶೆಟ್ಟರ್, ಬುರುಡೆ ಬಿಟ್ಟ ಗ್ಯಾಂಗ್ ಪರವಾಗಿ ರಾಜ್ಯ ಸರ್ಕಾರ ಮೃದು ಧೋರಣೆ ತೋರಿದ್ದು ಸ್ಪಷ್ಟವಾಗುತ್ತದೆ. ಕಮ್ಯುನಿಸ್ಟರು ಹೇಳಿದಂತೆ ಸಿದ್ದರಾಮಯ್ಯ ಕೇಳಿದ್ದಾರೆ. ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವ ದೊಡ್ಡ ಹುನ್ನಾರಕ್ಕೆ ಕೈಹಾಕಿದ ಗ್ಯಾಂಗ್ಗೆ ತಕ್ಕ ಶಿಕ್ಷೆಯಾಗಬೇಕು. ಆ ನಿಟ್ಟಿನಲ್ಲಿ ಕಾನೂನುಗಳ ಪಾಲನೆ ಆಗಬೇಕು. ಆದರೆ, ಈ ಪ್ರಕರಣದಲ್ಲಿ ಯಾರ ಮೇಲೂ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಪಾದಿಸಿದರು.



