ವಿಜಯಸಾಕ್ಷಿ ಸುದ್ದಿ, ಗದಗ: ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಭದ್ರವಾಗಿಸಲು ಎಲ್ಲರೂ ನಮ್ಮ ದೇಶದ ಸಂವಿಧಾನ ಓದಿ ಅರ್ಥ ಮಾಡಿಕೊಳ್ಳಬೇಕು. ಜಗತ್ತಿನಲ್ಲೇ ನಮ್ಮ ದೇಶದ ಸಂವಿಧಾನ ಶ್ರೇಷ್ಠವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಭಾರತ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಭಾರತೀಯರ ಬದುಕಿನ ಅವಿಭಾಜ್ಯ ಅಂಗವಾಗಿದೆ. ಸಂವಿಧಾನದ ಆಶಯಗಳಿಗನುಗುಣವಾಗಿ ಎಲ್ಲರೂ ಬದುಕು ಕಟ್ಟಿಕೊಳ್ಳಬೇಕು. ಸಂವಿಧಾನ ಭಾರತೀಯ ನಾಗರಿಕರ ರಕ್ಷಣೆ ಮಾಡುತ್ತಿದೆ. ಅದರಂತೆ ನಾವು ಸಹ ಮುಂದಿನ ಪೀಳಿಗೆಗೆ ಸಂವಿಧಾನದ ಆಶಯ, ಮಹತ್ವವನ್ನು ಸಾರುವ ಮೂಲಕ ಸಂವಿಧಾನವನ್ನು ರಕ್ಷಣೆ ಮಾಡಬೇಕು ಎಂದರು.
ಭಾರತ ದೇಶಕ್ಕೆ ಸಂವಿಧಾನವನ್ನು ರಚಿಸಲು ಅನೇಕರ ಶ್ರಮವಿದೆ. ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ಕರಡು ರಚನಾ ಸಮಿತಿಯ ಅಧ್ಯಕ್ಷತೆ ವಹಿಸಿ ಪ್ರಪಂಚದ ಎಲ್ಲಾ ಸಂವಿಧಾನಗಳನ್ನು ಅಧ್ಯಯನ ಮಾಡಿ ನಮ್ಮ ದೇಶದ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗೆ ಹೊಂದುವ ತೆ ಒಂದು ಸಮಗ್ರವಾದ ಸಂವಿಧಾನವನ್ನು ಸಿದ್ಧಪಡಿಸಿದ್ದಾರೆ. ನಮ್ಮ ಮೂಲಭೂತ ಹಕ್ಕುಗಳನ್ನು ಕೇಳುವುದರ ಜೊತೆಗೆ ಮೂಲಭೂತ ಕರ್ತವ್ಯಗಳನ್ನು ನಿಭಾಯಿಸೋಣ ಎಂದು ಕರೆ ನೀಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಡಾ. ಅಂಬೇಡ್ಕರ್ ರಚಿಸಿದ ಸಂವಿಧಾನ ಅರಿತರೆ ಎಲ್ಲರೂ ಸಂವಿಧಾನವನ್ನು ಗೌರವದಿಂದ ಕಾಣುತ್ತಾರೆ. ಸಂವಿಧಾನ ಆಶಯಕ್ಕೆ ಅನುಗುಣವಾಗಿ ನಾವೆಲ್ಲರೂ ಮುನ್ನಡೆಯೋಣ ಎಂದರು.
ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಅವರು ನೆರೆದಿದ್ದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಸಂವಿಧಾನ ಪ್ರತಿಜ್ಞಾ ವಿಧಿ ಬೋಧಿಸಿದರು.
ಹುಲಕೋಟಿ ಜಿಸಿಟಿಎಂ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಅರ್ಜುನ ಗೊಳಸಂಗಿ ಉಪನ್ಯಾಸ ನೀಡಿ, ಭಾರತೀಯ ಸಂವಿಧಾನದಲ್ಲಿ 395 ಅನುಚ್ಛೇದಗಳು, 28 ಭಾಗಗಳು ಹಾಗೂ 8 ಷೆಡ್ಯೂಲ್ಗಳು ಇವೆ. ವಿಶ್ವದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನವಾಗಿ ಭಾರತ ಸಂವಿಧಾನವಿದೆ. ಇದರ ಸಂಪೂರ್ಣ ರಚನೆಯ ಜವಾಬ್ದಾರಿ ಡಾ. ಬಿ.ಆರ್. ಅಂಬೇಡ್ಕರ್ ಅವರದ್ದಾಗಿತ್ತು. ಹಾಗಾಗಿಯೇ ಅವರನ್ನು ಭಾರತ ಸಂವಿಧಾನದ ಪಿತಾಮಹ ಎಂದು ಕರೆಯಲಾಗುತ್ತದೆ ಎಂದರು.
ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸ್ವಾಗತಿಸಿದರು. ಪ್ರೊ. ಬಾಹುಬಲಿ ಜೈನರ ನಿರ್ವಹಿಸಿದರು.
ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಕ್ಬರ್ಸಾಬ್ ಬಬರ್ಚಿ, ಡಿವೈಎಸ್ಪಿ ವಿದ್ಯಾನಂದ ನಾಯ್ಕ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಾ. ಬಸವರಾಜ ಬಳ್ಳಾರಿ, ಡಾ. ಎಸ್.ಎಸ್. ನೀಲಗುಂದ, ಆರ್.ಎಸ್. ಬುರಡಿ, ರಾಜಾರಾಮ ಪವಾರ ಇದ್ದರು.
ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ನಗರಸಭೆ ಆವರಣದಿಂದ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ಆಯೋಜಿಸಲಾಗಿತ್ತು. ಮೆರವಣಿಗೆಗೆ ವಿ.ಪ. ಸದಸ್ಯ ಎಸ್.ವಿ. ಸಂಕನೂರ ಚಾಲನೆ ನೀಡಿದರು. ಈ ವೇಳೆ ಕೃಷ್ಣಗೌಡ ಪಾಟೀಲ, ಅಶೋಕ ಮಂದಾಲಿ, ಎಸ್.ಎನ್. ಬಳ್ಳಾರಿ, ಬಸವರಾಜ ಕಡೆಮನಿ, ಮುರ್ತುಜಾ ಖಾದ್ರಿ, ನಂದಾ ಹಣಬರಟ್ಟಿ, ಡಾ. ಬಸವರಾಜ ಬಳ್ಳಾರಿ, ಗಂಗಪ್ಪ ಎಂ ಇದ್ದರು.



