ವಿಜಯಸಾಕ್ಷಿ ಸುದ್ದಿ, ಗದಗ: 10ಕ್ಕೂ ಹೆಚ್ಚು ವರ್ಷಗಳ ಕಾಲ ಜ್ಞಾನಸುಧೆ ಹರಿಸಿದ ಅತಿಥಿ ಉಪನ್ಯಾಸಕರು ಸರ್ಕಾರದ ದ್ವಂದ್ವ ನೀತಿಯಿಂದಾಗಿ ಬೀದಿಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣ ಮಾಡಿರುವುದೇ ಸರ್ಕಾರದ ದೊಡ್ಡ ಸಾಧನೆಯಾಗಿದೆ ಎಂದು ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಆರ್. ಗೊಂವಿದಗೌಡ್ರ ಸರ್ಕಾರವನ್ನು ಟೀಕಿಸಿದರು.
ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಬೆಂಗಳೂರು, ಗದಗ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿರುವ ಅತಿಥಿ ಉಪನ್ಯಾಸಕರ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಭಾರತ ಆಹಾರ ನಿಗಮದ ರಾಜ್ಯ ಸಮಿತಿ ಸದಸ್ಯ, ಕೆವಿಎಸ್ಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿ ದಂಡಿನ್ ಮಾತನಾಡಿ, ಅತಿಥಿ ಉಪನ್ಯಾಸಕರು ಬೀದಿಯಲ್ಲಿ ಕುಳಿತು ಹೋರಾಟ ಮಾಡುತ್ತಿದ್ದಾರೆ. ಇದನ್ನು ನೋಡುತ್ತಿರುವ ಅಧಿಕಾರಿಗಳು ಸೌಜನ್ಯಕ್ಕಾದರೂ ಮಾತನಾಡಿಸದಿರುವುದು ಖೇದಕರ. ಇವರಿಗೆ ನ್ಯಾಯ ನೀಡಬೇಕಾಗಿರುವ ಸರ್ಕಾರ ಇವತ್ತು ಹಿರಿಯ ಅತಿಥಿ ಉಪನ್ಯಾಸಕರನ್ನು ಹೊರಗಿಟ್ಟು ಅನ್ಯಾಯ ಮಾಡುತ್ತಿರುವುದನ್ನು ನಿಲ್ಲಿಸಿ ಅವರಿಗೆ ಸರ್ಕಾರ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಮತ್ತು 6 ಸಾವಿರ ಅತಿಥಿ ಉಪನ್ಯಾಸಕರ ಬೆನ್ನಿಗೆ ನಿಲ್ಲುತ್ತೇವೆ ಎಂದು ಹೇಳಿದರು.
ಸಾಮಾಜಿಕ ಹೋರಾಟಗಾರ ರವಿಕಾಂತ ಅಂಗಡಿ, ಪ್ರೊ. ಉಮೇಶ ಹಿರೇಮಠ ಮಾತನಾಡಿದರು. ಅತಿಥಿ ಉಪನ್ಯಾಸಕರ ಹೋರಾಟ ದಿಢೀರನೆ ಉಗ್ರ ಸ್ವರೂಪವನ್ನು ಪಡೆದುಕೊಂಡು ಒಂದು ತಾಸಿಗೂ ಹೆಚ್ಚು ಕಾಲ ಗದಗ-ಹುಬ್ಬಳ್ಳಿ ರಸ್ತೆಯನ್ನು ತಡೆದು ಹೋರಾಟ ನಡೆಸಿದರು.
ಪೊಲೀಸರ ಮತ್ತು ಅತಿಥಿ ಉಪನ್ಯಾಸಕರ ಮಧ್ಯೆ ತೀವ್ರ ವಾಗ್ವಾದ ಪ್ರಾರಂಭವಾದಾಗ ಹುಲಕೋಟಿಯ ಕೆ.ಎಚ್. ಪಾಟೀಲ ಕಾಲೇಜಿನ ಮಹಿಳಾ ಅತಿಥಿ ಉಪನ್ಯಾಸಕಿ ನೂರಜಾನ ಕದಾಂಪುರ ತೀವ್ರ ಅಸ್ವಸ್ಥತೆಗೊಳಗಾದರು.
ಪ್ರತಿಭಟನೆಯಲ್ಲಿ ಬೀದರ, ಗುಲಬರ್ಗಾ, ಕಾರವಾರ, ಧಾರವಾಡ, ಬಾಗಲಕೋಟೆ, ವಿಜಯನಗರ, ಬಳ್ಳಾರಿ, ಹಾವೇರಿ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಅತಿಥಿ ಉಪನ್ಯಾಸಕರು ಪಾಲ್ಗೊಂಡಿದ್ದರು.
ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ಮಾತನಾಡಿ, ಈ ಕೂಡಲೇ ಕೌನ್ಸೆಲಿಂಗ್ ನಿಲ್ಲಿಸಬೇಕು. ಅತಿಥಿ ಉಪನ್ಯಾಸಕರಿಗೆ ಏನಾದರೂ ಅನಾಹುತವಾದರೆ ಸರ್ಕಾರವೇ ಕಾರಣ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಸ್ಪಂದಿಸಿ ನಮಗೆ ನ್ಯಾಯ ನೀಡಲು ಮುಂದಾಗಬೇಕು ಎಂದು ಹೇಳಿದರು.



