ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರ ಸ್ಥಾನ ಸಿಗಬೇಕು. ಕನ್ನಡವೆಂದರೆ ಅದು ನಮ್ಮ ಸಂಸ್ಕೃತಿ. ಕನ್ನಡ ನಾಡು-ನುಡಿ, ಸಂಸ್ಕೃತಿ ಬಗ್ಗೆ ಅಭಿಮಾನ ಹೆಚ್ಚಾಗಬೇಕು ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.
ಲಿಂಗಾಯತ ಪ್ರಗತಿಶೀಲ ಸಂಘದ 2773ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ನಮ್ಮ ಭಾವನೆಗಳನ್ನು ಕನ್ನಡ ಭಾಷೆಯಲ್ಲಿ ಮಾತ್ರ ವ್ಯಕ್ತಪಡಿಸಲು ಸಾಧ್ಯ. ಕನ್ನಡವೇ ಆಡಳಿತ ಭಾಷೆ ಆಗಬೇಕು. ಕನ್ನಡಿಗರಿಗೆ ಭಾಷಾಭಿಮಾನ ಬೆಳೆಯಬೇಕು ಎಂದು ಹೇಳಿದರು.
ವಿನಯ್ ಚಿಕ್ಕಟ್ಟಿ ಕಾಲೇಜಿನ ಶ್ರೀಶೈಲ ಬಡಿಗೇರ ಉಪನ್ಯಾಸ ನೀಡಿ ಮಾತನಾಡಿ, ಕನ್ನಡ ಕನ್ನಡಕವಾಗಿರದೇ ಕಣ್ಣಾಗಿರಲಿ. ಕರ್ನಾಟಕದಲ್ಲಿ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಬೇಕು, ಬೆಳೆಸಬೇಕು. ದಿನನಿತ್ಯದ ಕಾರ್ಯಗಳಲ್ಲಿ ಕನ್ನಡವನ್ನು ಹೆಚ್ಚಾಗಿ ಮಾತನಾಡುವುದರಿಂದ ಭಾಷೆ ಬೆಳೆಯುತ್ತದೆ. ಕನ್ನಡ ಭಾಷೆ ಮಾತನಾಡಿದರೆ ದೇಹದ ಎಲ್ಲಾ ಅಂಗಾಂಗಗಳಿಗೆ ವ್ಯಾಯಾಮವಾಗುತ್ತದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ ಎಂದು ತಿಳಿಸಿದರಲ್ಲದೆ, ಸ್ವತಃ ತಾವೇ ರಚಿಸಿದ ದ್ವಿಪದಿಯನ್ನು ಮಂಡಿಸಿದರು.
ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರಶಸ್ತಿಯನ್ನು ಹುಬ್ಬಳ್ಳಿಯ ಹಿರಿಯ ಪತ್ರಕರ್ತೆ ವಿಶಾಲಾಕ್ಷಿ ಅಕ್ಕಿ ಹಾಗೂ ಸಮಾಜ ಸೇವಿಕಾ ಪ್ರಶಸ್ತಿಯನ್ನು ಶಿವಮ್ಮ ಶೇಖರಪ್ಪ ಚಳ್ಳಮರದ ಅವರಿಗೆ ಪ್ರದಾನ ಮಾಡಲಾಯಿತು.
ವಚನಸಂಗೀತ ಸೇವೆಯನ್ನು ಗುರುನಾಥ್ ಸುತಾರ ಹಾಗೂ ಮೃತ್ಯುಂಜಯ ಹಿರೇಮಠ ನಡೆಸಿಕೊಟ್ಟರು. ಧಾರ್ಮಿಕ ಗ್ರಂಥಪಠಣವನ್ನು ಅನುರಾಧಾ ಗಡಾದ, ವಚನ ಚಿಂತನವನ್ನು ಸಾನ್ವಿ ರಾಜಪ್ಪನವರ ಮಾಡಿದರು. ದಾಸೋಹ ಸೇವೆಯನ್ನು ಸಂಗಮೇಶ ದುಂದೂರ ಹಾಗೂ ಕುಟುಂಬ ವರ್ಗದವರು ವಹಿಸಿದ್ದರು. ರಾಜೇಶ್ವರಿ ಕಲಾ ಕುಟೀರ ಗದಗ ಮಕ್ಕಳಿಂದ ಆಕರ್ಷಕ ನೃತ್ಯ ಪ್ರದರ್ಶನ ನಡೆಯಿತು. ಚಿಲ್ಲಾಳೇಶ್ವರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ನಾಡು-ನುಡಿ ಗೀತ ನೃತ್ಯ ರೂಪಕ ನಡೆದವು.
ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ, ಉಪಾಧ್ಯಕ್ಷ ಡಾ. ಉಮೇಶ ಪುರದ, ವಿದ್ಯಾ ಪ್ರಭು ಗಂಜಿಹಾಳ, ಕಾರ್ಯದರ್ಶಿ ವೀರಣ್ಣ ಗೋಟಡಕಿ, ಸಹಕಾರ್ಯದರ್ಶಿ ಸೋಮನಾಥ ಪುರಾಣಿಕ, ನಾಗರಾಜ್ ಹಿರೇಮಠ, ಸಂಘಟನಾ ಕಾರ್ಯದರ್ಶಿ ಮಹೇಶ್ ಗಾಣಿಗೇರ, ಕೋಶಾಧ್ಯಕ್ಷ ಬಸವರಾಜ ಕಾಡಪ್ಪನವರ, ಶಿವಾನುಭವ ಸಮಿತಿಯ ಸಹ ಚೇರ್ಮನ್ ಶಿವಾನಂದ ಹೊಂಬಳ ಹಾಗೂ ಶ್ರೀಮಠದ ಭಕ್ತರು ಉಪಸ್ಥಿತರಿದ್ದರು. ಶಿವಾನುಭವ ಸಮಿತಿಯ ಚೇರ್ಮನ್ ಐ.ಬಿ. ಬೆನಕೊಪ್ಪ ಸ್ವಾಗತಿಸಿದರು. ವಿದ್ಯಾ ಪ್ರಭು ಗಂಜಿಹಾಳ ಕಾರ್ಯಕ್ರಮ ನಿರೂಪಿಸಿದರು.
ಸೋಮಶೇಖರ ಮುನವಳ್ಳಿ ಯು.ಎಸ್.ಎ ರವರು ಕೊಡಮಾಡುವ ಮಾಧ್ಯಮ ಪ್ರಶಸ್ತಿಯನ್ನು ಸ್ವೀಕರಿಸಿದ ವಿಶಾಲಾಕ್ಷಿ ಅಕ್ಕಿ ಹುಬ್ಬಳ್ಳಿ ಮಾತನಾಡಿ, ಪತ್ರಿಕೋದ್ಯಮದ ಕೆಲಸ ಮಹತ್ವದ್ದು. ಪತ್ರಿಕೆಯವರು ಕನ್ನಡವನ್ನು ಬೇರಾಗಿ ಇಟ್ಟುಕೊಂಡಿದ್ದೇವೆ. ಆದರೂ ಅಚ್ಚಕನ್ನಡದಲ್ಲಿ ಬರೆಯುವವರು ಕಡಿಮೆ. ಪತ್ರಿಕೋದ್ಯಮದಲ್ಲಿ ಸಮಾಜದ ಹೊಣೆಗಾರಿಕೆಯನ್ನು ಪ್ರತಿಪಾದಿಸಲು ಜಾಗವಿದೆ ಎಂದು ಅಭಿಪ್ರಾಯಪಟ್ಟರು.



