ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷರು ಹಾಗೂ ಗದಗ ಟೀ ಡಿಪೋ ಮಾಲೀಕರಾದ ಎಸ್.ಪಿ. ಸಂಶಿಮಠ ಇವರ ಧರ್ಮಪತ್ನಿ ಶೋಭಾ ಎಸ್.ಸಂಶಿಮಠ ಲಿಂಗೈಕ್ಯರಾಗಿದ್ದು ನೋವನ್ನುಂಟು ಮಾಡಿದೆ. ಅವರ ಅಗಲಿಕೆಯಿಂದ ಸಂಸ್ಥೆಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ನೀಡಲಿ ಹಾಗೂ ಸಂಶಿಮಠ ಕುಟುಂಬ ವರ್ಗಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ನೀಡಲೆಂದು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಾರ್ಥಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಎಸ್.ಗುಡಿಮಣಿ ವಹಿಸಿ ಮಾತನಾಡಿ, ಒಬ್ಬ ಹಿರಿಯರು ನಮ್ಮನ್ನು ಅಗಲಿರುವುದು ಮನಸ್ಸಿಗೆ ತುಂಬಾ ನೋವು ಉಂಟುಮಾಡಿದೆ. ಪರಮಾತ್ಮನು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ ಮತ್ತು ಸಂಶಿಮಠ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲೆಂದು ಪ್ರಾರ್ಥಿಸಿದರು.
ಸಂಸ್ಥೆಯ ಮಾಜಿ ಅಧ್ಯಕ್ಷ ರಾಮನಗೌಡ ಬಿ.ದಾನಪ್ಪಗೌಡ್ರ, ಉಪಾಧ್ಯಕ್ಷ ಜಯದೇವ ಎಂ.ಮೆಣಸಗಿ ಮಾತನಾಡಿ, ಶೋಭಾ ಎಸ್.ಸಂಶಿಮಠ ಇವರು ಸಂಸ್ಥೆಯ ಮಹಿಳಾ ಘಟಕದ ಉಪಾಧ್ಯಕ್ಷರಾಗಿ ಸೇವೆಯನ್ನು ಮಾಡಿದ್ದಾರೆ. ಅವರ ಅಗಲಿಕೆಯಿಂದ ತುಂಬಲಾರದ ನಷ್ಟವಾಗಿದೆ ಎಂದರು.
ಸಭೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಸಂಸ್ಥೆಯ ಮಹಿಳಾ ಘಟಕದ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಪಾಲ್ಗೊಂಡಿದ್ದರೆಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಚನ್ನವೀರಪ್ಪ ಪ್ರಭಣ್ಣ ಹುಣಸಿಕಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



