ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಆಧುನಿಕ ಭಾರತವನ್ನು ಪುನರ್ ರೂಪಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ಅಹಿಂಸಾವಾದಿ ಹಾಗೂ ತತ್ವಜ್ಞಾನಿಯಾಗಿದ್ದರು. ದೇಶದ ಪ್ರತಿಯೊಬ್ಬ ಪ್ರಜೆ ಅವರ ವಿಚಾರ ಮತ್ತು ಬಹುರೂಪಿ ವ್ಯಕ್ತಿತ್ವವನ್ನು ಅರ್ಥಮಾಡಿಕೊಳ್ಳಬೇಕಿದೆ. ಎಲ್ಲಾ ವರ್ಗಗಳ ಹಾಗೂ ಶೋಷಿತ ಸಮುದಾಯಗಳ ಏಳಿಗೆಗೆ ಅಂಬೇಡ್ಕರರು ನಿರಂತರ ಶ್ರಮಿಸಿದ್ದಾರೆ ಎಂದು ತಹಸೀಲ್ದಾರ ಕೆ. ರಾಘವೇಂದ್ರ ರಾವ್ ಹೇಳಿದರು.
ಅವರು ಶನಿವಾರ ಶಿರಹಟ್ಟಿಯಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ತಹಸೀಲ್ದಾರರ ಕಾರ್ಯಾಲಯದಲ್ಲಿ ಡಾ. ಬಿ.ಆರ್. ಅಂಬೇಡ್ಕರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಸಮುದಾಯದ ಮುಖಂಡ ನಾಗರಾಜ ಲಕ್ಕುಂಡಿ ಮಾತನಾಡಿ, 1891ರ ಏಪ್ರಿಲ್ 14ರಂದು ಜನಿಸಿದ ಡಾ. ಬಿ.ಆರ್. ಅಂಬೇಡ್ಕರರು ಅಸಮಾನತೆ ತಾಂಡವಾಡುತ್ತಿದ್ದ ಕಾಲದಲ್ಲಿ ತಾನು ಅನುಭವಿಸಿದ ನೋವು, ಯಾತನೆಗಳು ಮುಂದಿನ ಜನಾಂಗಕ್ಕೆ ಸಿಗಬಾರದು ಎಂಬ ದೃಷ್ಟಿಯಿಂದ ನಿರಂತರವಾಗಿ ಅಧ್ಯಯನ ಮಾಡಿ, ಅಸ್ಪೃಶ್ಯತೆ, ಅಸಮಾನತೆ, ತಾರತಮ್ಯದ ವಿರುದ್ಧ ಹೋರಾಡಿ, ಪ್ರತಿಯೊಬ್ಬರ ಹಕ್ಕುಗಳಿಗಾಗಿ ನ್ಯಾಯ ಒದಗಿಸಿದ್ದಾರೆ. ದೇಶಕ್ಕೆ ಬಲಿಷ್ಠ ಮತ್ತು ಶ್ರೇಷ್ಠ ಸಂವಿಧಾನವನ್ನು ನೀಡಿದ ಮಹನೀಯರು ಅವರು. ಜೀವನಪರ್ಯಂತ ಸಮಾಜದ ಅಭ್ಯುದಯಕ್ಕಾಗಿ ಚಿಂತಿಸಿದ ಬಾಬಾ ಸಾಹೇಬರು ಡಿಸೆಂಬರ್ 6, 1956ರಂದು ದೇಹತ್ಯಾಗ ಮಾಡಿದರು. ಬಾಬಸಾಹೇಬ್ ಅಂಬೇಡ್ಕರರ ತತ್ವಗಳನ್ನು, ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭ್ಯುದಯಕ್ಕೆ ಎಲ್ಲರೂ ಶ್ರಮಿಸೋಣ ಎಂದು ತಿಳಿಸಿದರು.
ಮುಖಂಡರಾದ ಜಾನು ಲಮಾಣಿ, ಡಿ.ಕೆ. ಹೊನ್ನಪ್ಪನವರ, ಗೋವಿಂದಪ್ಪ ಬಾಗೇವಾಡಿ, ಈರಣ್ಣ ಚವ್ಹಾಣ, ತಿಪ್ಪಣ್ಣ ಲಮಾಣಿ, ರಾಜು ಶಿರಹಟ್ಟಿ, ಮಾಬೂಸಾಬ ಲಕ್ಷ್ಮೇಶ್ವರ, ಆನಂದ ಕೋಳಿ, ಖಜಾನೆ ಇಲಾಖೆಯ ಶಿವಪ್ಪ ಹದ್ಲಿ, ಸಮಾಜ ಕಲ್ಯಾಣ ಇಲಾಖೆಯ ಗೋಪಾಲ ಲಮಾಣಿ, ನೋಂದಣಿ ಇಲಾಖೆಯ ಶರಣಪ್ಪ ಪವಾರ, ಮಲ್ಲಿಕಾರ್ಜುನ ಪಾಟೀಲ, ಆಸ್ಮಾ ಸುರಪೂರ, ಗಿರಿಜಾ ಪೂಜಾರ, ರಂಗಪ್ಪ ಕಾಂಬ್ಳೆ ಸೇರಿ ಅಂಬೇಡ್ಕರ ನಗರದ ಸಾರ್ವಜನಿಕರು ಉಪಸ್ಥಿತರಿದ್ದರು.
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸ್ವಾತಂತ್ರ್ಯ ಭಾರತದ ಪ್ರಥಮ ಕಾನೂನು ಮಂತ್ರಿಯಾಗಿ ಭಾರತದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಭಾರತದ ಸಂವಿಧಾನ ರಚಿಸುವಲ್ಲಿ ಅಂಬೇಡ್ಕರರು ಹಗಲಿರುಳು ಶ್ರಮಿಸಿದ್ದಾರೆ. ಭಾರತದ ಎಲ್ಲಾ ವರ್ಗದ ಕಟ್ಟಕಡೆಯ ಜನರಿಗೂ ಸಂವಿಧಾನದ ಸೌಲಭ್ಯಗಳು ತಲುಪುವಲ್ಲಿ ಶ್ರಮಿಸಿದ್ದಾರೆ ಎಂದು ತಹಸೀಲ್ದಾರ ಕೆ. ರಾಘವೇಂದ್ರ ರಾವ್ ತಿಳಿಸಿದರು.



