ಬೆಂಗಳೂರು/ ದಾವಣಗೆರೆ:- ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕಳೆದೊಂದು ತಿಂಗಳುಗಳಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಅವರಿಗೆ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಇತ್ತೀಚೆಗೆ ಆಸ್ಪತ್ರೆ ಭೇಟಿ ನೀಡಿ ಶಿವಶಂಕರಪ್ಪ ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದಿದ್ದರು. ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸುಧಾರಣೆಯಾಗಲಿ ಎಂದು ದಾವಣಗೆರೆಯಲ್ಲಿ ಅಭಿಮಾನಿಗಳಿಂದ ಪ್ರಾರ್ಥನೆ ನೆರವೇರಿತ್ತು. ದುರಾದೃಷ್ಟವಶಾತ್ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇನ್ನೂ ಶಾಮನೂರು ಶಿವಶಂಕರಪ್ಪರ ಅಂತ್ಯಸಂಸ್ಕಾರಕ್ಕೆ ದಾವಣಗೆರೆಯ ಕಲ್ಲೇಶ್ವರ ಮಿಲ್ನಲ್ಲಿ ಸಿದ್ಧತೆ ನಡೆದಿದೆ. ರಾತ್ರಿಯಿಂದಲೇ ಜೆಸಿಬಿಯಿಂದ ಸಮಾಧಿ ಗುಂಡಿ ತೆಗೆಯಲಾಗಿದೆ. ಶಾಮನೂರು ಶಿವಶಂಕರಪ್ಪ ತಂದೆ, ತಾಯಿ, ಸಹೋದರರು ಹಾಗೂ ಧರ್ಮಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಿವಶಂಕರಪ್ಪ ಅಂತ್ಯಸಂಸ್ಕಾರ ನಡೆಯಲಿದೆ.
ಇನ್ನು ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ನೂರಕ್ಕೂ ಹೆಚ್ಚು ವಿವಿಐಪಿಗಳು ಆಗಮಿಸಲಿದ್ದಾರೆ. ಒಂದು ನೂರಕ್ಕೂ ಹೆಚ್ಚು ಪಂಚಪೀಠ ಮತ್ತು ವಿರಕ್ತಮಠಗಳ ಸ್ವಾಮೀಜಿಗಳು ಭಾಗಿ ಆಗಲಿದ್ದಾರೆ. ಹೀಗಾಗಿ, ಎಂಬಿಎ ಕಾಲೇಜ್, ಐಟಿಐ ಕಾಲೇಜ್ ಐದು ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗಿದೆ.
ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ. ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂತಿಮ ದರ್ಶನಕ್ಕೆ ಸುಮಾರು ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ ಇದೆ.
ಶಾಮನೂರರ ರಾಜಕೀಯ ಬದುಕು:-
ಶಾಮನೂರು ಶಿವಶಂಕರಪ್ಪನವರು 1969ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗುವ ಮೂಲಕ ರಾಜಕೀಯ ಪ್ರವೇಶಿಸಿದರು. 1971 ರಿಂದ 1973ರ ವರೆಗೆ ಅವಿಭಜಿತ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1980ರಲ್ಲಿ ಲೋಕಸಭಾ ಚುನಾವಣೆಗೆ ಅರಸು ಕಾಂಗ್ರೆಸ್ನ ಅಭ್ಯರ್ಥಿಯಾಗಿ ಸ್ಪರ್ಧಿಸಿ ಇಂದಿರಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿ ಟಿ.ವಿ ಚಂದ್ರಶೇಖರಪ್ಪರ ವಿರುದ್ಧ ಪರಾಭವಗೊಂಡರು.
ಇದಾದ ಬಳಿಕ 1994ರಲ್ಲಿ ನಡೆದ 10ನೇ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಖಾಡಕ್ಕಿಳಿದ ಅವರು ಬಿಜೆಪಿ ಅಭ್ಯರ್ಥಿ ಕೆ.ಬಿ ಶಂಕರನಾರಾಯಣರನ್ನ ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 1997 ರಲ್ಲಿ ಲೋಕಸಭಾ ಚುನಾವಣೆಗೆ ಸ್ಫರ್ಧಿಸಿದ ಶಿವಶಂಕರಪ್ಪ, ಬಿಜೆಪಿ ಅಭ್ಯರ್ಥಿ ಜಿ.ಮಲ್ಲಿಕಾರ್ಜುನಪ್ಪ ಅವರನ್ನ ಸೋಲಿಸಿ ಸಂಸದರಾದರು. 2004 ರಲ್ಲಿ ಶಿವಶಂಕರಪ್ಪ 2ನೇ ಬಾರಿ ಶಾಸಕರಾಗಿ ಆಯ್ಕೆಯಾದರು. ಆ ನಂತ್ರ 2008 ರಲ್ಲಿ 3ನೇ ಬಾರಿಗೆ. 2013 ರಲ್ಲಿ 4ನೇ ಬಾರಿಗೆ, 2018ರಲ್ಲಿ 5ನೇ ಬಾರಿಗೆ ಹಾಗೂ 2023ರಲ್ಲಿ 6ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 2013 ರಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಸಂಪುಟದಲ್ಲಿ ಎರಡೂವರೆ ವರ್ಷ ತೋಟಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.



