ಬೆಂಗಳೂರು:- ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತೀವ್ರ ಚಳಿ ಜನರನ್ನು ಕಂಗಾಲು ಮಾಡಿದೆ.
ಕಳೆದ ಎರಡು ದಿನಗಳಿಂದ ನಗರದಲ್ಲಿ ಕನಿಷ್ಠ ತಾಪಮಾನ 14 ರಿಂದ 15 ಡಿಗ್ರಿ ಸೆಲ್ಸಿಯಸ್ ನಡುವೆ ದಾಖಲಾಗಿದ್ದು, ಹೆಚ್ಎಎಲ್ ಪ್ರದೇಶದಲ್ಲಿ 13 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ಇಳಿಕೆಯಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಶೀತ ಅಲೆಗಳ ಸಾಧ್ಯತೆ ಇರುವುದರಿಂದ ಬಾಗಲಕೋಟೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗದಗ, ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರಿನಲ್ಲಿ ಚಳಿ ಆರ್ಭಟ ಮುಂದುವರಿದಿದ್ದು, ಬೆಳಗಿನ ಸಮಯದಲ್ಲಿ ತೀವ್ರ ಶೀತ ವಾತಾವರಣ ಕಂಡುಬರುತ್ತಿದೆ. ಇದರಿಂದ ಬೆಳಗಿನ ವಾಯುವಿಹಾರಕ್ಕೆ ಹೋಗುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಲಾಲ್ಬಾಗ್ ಸೇರಿದಂತೆ ಉದ್ಯಾನವನಗಳಲ್ಲಿ ವಾಕಿಂಗ್ ಮಾಡುವವರ ಸಂಖ್ಯೆ ಶೇ.50ರಷ್ಟು ಇಳಿಕೆಯಾಗಿದೆ. ಡಿಸೆಂಬರ್ 17ರಿಂದ ಚಳಿ ಪ್ರಮಾಣ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆ ಇದೆ.
ವೈದ್ಯರು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವಂತೆ ಸಲಹೆ ನೀಡಿದ್ದಾರೆ. ವಿಶೇಷವಾಗಿ ಮಕ್ಕಳು ಹಾಗೂ ಹಿರಿಯರ ಆರೈಕೆಗೆ ಒತ್ತು ನೀಡಬೇಕೆಂದು ಸೂಚಿಸಿದ್ದಾರೆ. ಬೆಳಗಿನ ವಾಕಿಂಗ್ ಮತ್ತು ವ್ಯಾಯಾಮವನ್ನು ತಾತ್ಕಾಲಿಕವಾಗಿ ತಪ್ಪಿಸಿ, ಬೆಚ್ಚಗಿನ ಬಟ್ಟೆ ಧರಿಸಿ ಬಿಸಿ ಆಹಾರ ಸೇವಿಸುವಂತೆ ಹೇಳಿದ್ದಾರೆ.
ಬಿದರಿನಲ್ಲಿ ಕನಿಷ್ಠ 7.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ರಾಜ್ಯದಲ್ಲೇ ಅತಿ ಕಡಿಮೆ ತಾಪಮಾನವಾಗಿದೆ. ಹಾಸನದಲ್ಲಿ 8.7 ಡಿಗ್ರಿ, ಆಗುಂಬೆಯಲ್ಲಿ 9.3 ಡಿಗ್ರಿ, ಧಾರವಾಡದಲ್ಲಿ 9.5 ಡಿಗ್ರಿ, ವಿಜಯಪುರದಲ್ಲಿ 10 ಡಿಗ್ರಿ ತಾಪಮಾನ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 14.5 ಡಿಗ್ರಿ, ಹೆಚ್ಎಎಲ್ ಪ್ರದೇಶದಲ್ಲಿ 13.4 ಡಿಗ್ರಿ ಮತ್ತು ಕೆಐಎಎಲ್ ವ್ಯಾಪ್ತಿಯಲ್ಲಿ 12.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಮುಂದಿನ ನಾಲ್ಕು ದಿನಗಳ ಕಾಲ ಬೆಳಗ್ಗೆ 3ರಿಂದ 8 ಗಂಟೆಯವರೆಗೆ ಹೆಚ್ಚಿನ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಮತ್ತು ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸೂಚಿಸಲಾಗಿದೆ. ತಜ್ಞರ ಪ್ರಕಾರ, ಚಳಿಗಾಲದಲ್ಲಿ ಹೃದಯಾಘಾತ ಪ್ರಕರಣಗಳು ಶೇ.10ರಿಂದ 15ರಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಡಿಸೆಂಬರ್ ಮತ್ತು ಜನವರಿಯಲ್ಲಿ ಇವು ಹೆಚ್ಚಾಗಿ ಕಂಡುಬರುತ್ತವೆ. ಆದ್ದರಿಂದ ಬೆಳಗಿನ ವಾಕ್ ತಪ್ಪಿಸಿ, ಸಂಜೆಯ ಸಮಯದಲ್ಲಿ ವಾಕಿಂಗ್ ಮಾಡುವುದು ಉತ್ತಮ ಎಂದು ಜಯದೇವ ಆಸ್ಪತ್ರೆಯ ವೈದ್ಯರು ಸಲಹೆ ನೀಡಿದ್ದಾರೆ. ಜೊತೆಗೆ ಕರಿದ ಆಹಾರ ಸೇವನೆ ತಪ್ಪಿಸಿ, ಆರೋಗ್ಯಕರ ಜೀವನಶೈಲಿ ಪಾಲಿಸುವಂತೆ ಸೂಚಿಸಿದ್ದಾರೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ದಕ್ಷಿಣ ಒಳನಾಡು ಭಾಗದ ಹಲವೆಡೆ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಕೆಲವು ದಿನಗಳ ಕಾಲ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



