ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ಅತೀವ ಗಂಭೀರ ಮಟ್ಟಕ್ಕೆ ತಲುಪಿರುವ ಹಿನ್ನೆಲೆಯಲ್ಲಿ, ನಾಳೆಯಿಂದಲೇ ರಾಷ್ಟ್ರ ರಾಜಧಾನಿಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲು ದೆಹಲಿ ಸರ್ಕಾರ ನಿರ್ಧರಿಸಿದೆ.
ಗುರುವಾರದಿಂದ ದೆಹಲಿಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ತಮ್ಮ ಸಿಬ್ಬಂದಿಗೆ ಕಡ್ಡಾಯವಾಗಿ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಬೇಕು ಎಂದು ದೆಹಲಿ ಕಾರ್ಮಿಕ ಸಚಿವ ಕಪಿಲ್ ಮಿಶ್ರಾ ಆದೇಶಿಸಿದ್ದಾರೆ.
ವಾಯು ಗುಣಮಟ್ಟ ನಿರ್ವಹಣಾ ಆಯೋಗ ಮತ್ತು ಪರಿಸರ ಇಲಾಖೆ ನೀಡಿದ ನಿರ್ದೇಶನಗಳ ಅನುಸಾರ, ಗುರುವಾರದಿಂದ ಯಾವುದೇ ಸರ್ಕಾರಿ ಅಥವಾ ಖಾಸಗಿ ಕಚೇರಿಯಲ್ಲಿ ಶೇ.50ಕ್ಕಿಂತ ಹೆಚ್ಚು ಸಿಬ್ಬಂದಿ ಹಾಜರಾಗುವಂತಿಲ್ಲ. ಸಾಧ್ಯವಾದ ಮಟ್ಟಿಗೆ ಎಲ್ಲಾ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಆಯ್ಕೆಯನ್ನು ನೀಡಬೇಕು ಎಂದು ಸಚಿವ ಮಿಶ್ರಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಾಲಿನ್ಯ ನಿಯಂತ್ರಣಕ್ಕಾಗಿ ಕೈಗೊಳ್ಳಲಾಗುವ ಲಾಕ್ಡೌನ್ ಕ್ರಮಗಳಿಂದ ನಿರ್ಮಾಣ ಕಾರ್ಯಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಇದರಿಂದ ಉದ್ಯೋಗ ಕಳೆದುಕೊಳ್ಳುವ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ₹10,000 ಪರಿಹಾರ ನೀಡಲಾಗುವುದು ಎಂದು ಘೋಷಿಸಲಾಗಿದೆ.
ಆದರೆ ಸಾರ್ವಜನಿಕ ಹಾಗೂ ಖಾಸಗಿ ಆರೋಗ್ಯ ಸೇವೆಗಳು, ಅಗ್ನಿಶಾಮಕ ದಳ, ಸಾರ್ವಜನಿಕ ಸಾರಿಗೆ ವ್ಯವಸ್ಥೆ, ಜೈಲು ಇಲಾಖೆ ಸೇರಿದಂತೆ ಅಗತ್ಯ ಸೇವೆಗಳಿಗೆ ಈ ನಿಯಮಗಳಿಂದ ವಿನಾಯಿತಿ ನೀಡಲಾಗಿದೆ. ವಾಹನಗಳಿಂದ ಉಂಟಾಗುವ ಮಾಲಿನ್ಯವೇ ವಾಯು ಗುಣಮಟ್ಟ ಹದಗೆಡುವ ಪ್ರಮುಖ ಕಾರಣವಾಗಿರುವುದರಿಂದ, ವಿಶೇಷವಾಗಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದ ಸಂದರ್ಭಗಳಲ್ಲಿ ವಾಹನ ಸಂಚಾರದ ಮೇಲೆ ಹೆಚ್ಚಿನ ನಿರ್ಬಂಧ ಅಗತ್ಯವಿದೆ ಎಂದು ಸರ್ಕಾರ ತಿಳಿಸಿದೆ.
ಇದಲ್ಲದೆ, ಉದ್ಯೋಗಿಗಳ ಸಂಚಾರ ಕಡಿಮೆ ಮಾಡಲು ಕಚೇರಿಗಳು ಕೆಲಸದ ಸಮಯದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಹಾಗೂ ಕಾರ್ಪೂಲಿಂಗ್ ವ್ಯವಸ್ಥೆಯನ್ನು ಉತ್ತೇಜಿಸಬೇಕು ಎಂದು ದೆಹಲಿ ಸರ್ಕಾರ ಮನವಿ ಮಾಡಿದೆ.



