ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಎಂದೇ ಗುರುತಿಸಲ್ಪಟ್ಟಿರುವ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಶಿವಮೊಗ್ಗದ ಸೋಗಾನೆ ಸಮೀಪದ ಕೇಂದ್ರ ಕಾರಾಗೃಹದಿಂದ ಎರಡು ದಿನಗಳ ಹಿಂದೆ ಬಿಡುಗಡೆಯಾದ ಚಿನ್ನಯ್ಯ, ತನ್ನ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಬುರುಡೆ ಗ್ಯಾಂಗ್ನ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್ ಟಿ ಹಾಗೂ ಸಮೀರ್ ಎಂ.ಡಿ ಅವರಿಂದ ತನಗೂ ಹಾಗೂ ತನ್ನ ಪತ್ನಿಗೂ ಜೀವ ಬೆದರಿಕೆ ಎದುರಾಗುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ತಮ್ಮ ಹಾಗೂ ಕುಟುಂಬದ ಸುರಕ್ಷತೆಗಾಗಿ ಪೊಲೀಸ್ ರಕ್ಷಣೆ ಒದಗಿಸುವಂತೆ ಚಿನ್ನಯ್ಯ ಮನವಿ ಮಾಡಿದ್ದಾರೆ. ಚಿನ್ನಯ್ಯ ಸಲ್ಲಿಸಿದ ದೂರು ಅರ್ಜಿಯನ್ನು ಬೆಳ್ತಂಗಡಿ ಪೊಲೀಸರು ದಾಖಲಿಸಿಕೊಂಡಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಳ್ಳಲಾಗುತ್ತಿದೆ.



