ತುಮಕೂರು: ರಾಜ್ಯ ಕಾಂಗ್ರೆಸ್ನಲ್ಲಿ ತಲೆದೋರಿರುವ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ಕುರಿತ ಗೊಂದಲದಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡುವ ಸಾಧ್ಯತೆ ಇಲ್ಲ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಿಎಂ ಬದಲಾವಣೆ ಕುರಿತ ಗೊಂದಲವನ್ನು ನಾವು ಸೃಷ್ಟಿ ಮಾಡಿಲ್ಲ. ನೀವು ಸೃಷ್ಟಿ ಮಾಡಿಕೊಂಡ ಗೊಂದಲವನ್ನು ನೀವೇ ಬಗೆಹರಿಸಿಕೊಳ್ಳಿ ಎಂಬ ಸಂದೇಶವನ್ನು ಹೈಕಮಾಂಡ್ ನೀಡಿದೆ. ಇದರ ಅರ್ಥ, ಈ ವಿಚಾರದಲ್ಲಿ ಹೈಕಮಾಂಡ್ ನೇರ ಹಸ್ತಕ್ಷೇಪ ಮಾಡುವುದಿಲ್ಲ ಎಂಬುದೇ ನನ್ನ ಭಾವನೆ” ಎಂದು ಹೇಳಿದರು.
ಈ ವಿಚಾರದಲ್ಲಿ ಹೈಕಮಾಂಡ್ ಮೇಲೆ ಬೆರಳು ಚಾಚುವ ಅಗತ್ಯವಿಲ್ಲ. ಇದು ಇಲ್ಲೇ ಕೆಲವರಿಂದ ಸೃಷ್ಟಿಯಾದ ಗೊಂದಲ. ಜನವರಿ ಅಥವಾ ಫೆಬ್ರವರಿಯಲ್ಲಿ ರಾಜ್ಯದಲ್ಲಿ ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾದ ನಂತರ ಈ ಪ್ರಕ್ರಿಯೆ ಆರಂಭವಾಗಬಹುದು. ಸದ್ಯ ಹೈಕಮಾಂಡ್ ಬ್ಯುಸಿಯಾಗಿದ್ದು, ಎಲ್ಲ ನಿರ್ಣಯವೂ ಅವರ ತೀರ್ಮಾನದ ಮೇಲೆಯೇ ಅವಲಂಬಿತವಾಗಿದೆ. ಸಿದ್ದರಾಮಯ್ಯ ಅವರಿಗೆ ತೊಂದರೆ ಆಗುತ್ತದೆಯೋ ಅಥವಾ ಆಗುವುದಿಲ್ಲವೋ ಎಂಬುದೂ ಹೈಕಮಾಂಡ್ಗೆ ಮಾತ್ರ ಗೊತ್ತು ಎಂದು ಹೇಳಿದರು.
ಈ ನಡುವೆ ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಇಬ್ಬರನ್ನೂ ನಾನು ಭೇಟಿಯಾಗಿದ್ದೇನೆ. ರಾಜಕೀಯ ಚರ್ಚೆಯ ಜೊತೆಗೆ ನನ್ನ ಕ್ಷೇತ್ರದ ಅಭಿವೃದ್ಧಿ ಕುರಿತೂ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು.



