ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಚಳಿಯ ವಾತಾವರಣ ಆವರಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ತಂಪಾದ ವಾತಾವರಣವಿದ್ದು, ಕನಿಷ್ಠ ತಾಪಮಾನ ಸುಮಾರು 17°C ಇರಲಿದೆ. ರಾತ್ರಿ ವೇಳೆಗೆ ಗರಿಷ್ಠ ತಾಪಮಾನ 26°C, ಕನಿಷ್ಠ ತಾಪಮಾನ 15°C ತಲುಪುವ ನಿರೀಕ್ಷೆಯಿದೆ. ಮುಂದಿನ 7 ದಿನಗಳ ಕಾಲ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ ತಿಂಗಳ ಸರಾಸರಿ ತಾಪಮಾನ 16°C ರಿಂದ 28°C ನಡುವೆಯೇ ಇರುತ್ತಿದ್ದು, ಪ್ರಸ್ತುತ ಹವಾಮಾನವೂ ಅದೇ ವ್ಯಾಪ್ತಿಯಲ್ಲಿ ಸಾಗುತ್ತಿದೆ. ದಿನದ ವೇಳೆ ಬಹುತೇಕ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ಕಡಿಮೆ. ಹೀಗಾಗಿ ಮಧ್ಯಾಹ್ನ ವೇಳೆಗೆ ಸಾಕಷ್ಟು ಬಿಸಿಲು ಕಾಣಿಸಿಕೊಳ್ಳಲಿದೆ. ಇನ್ನೂ ಉತ್ತರ, ಮಧ್ಯ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳು ಮತ್ತು ಬೆಂಗಳೂರು ನಗರದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ.
ಕರಾವಳಿ ಭಾಗದಲ್ಲಿ ಇಂದು ಹಾಗೂ ನಾಳೆ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯ ಸಾಧ್ಯತೆ ತೀರಾ ಕಡಿಮೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಚಳಿ ತೀವ್ರಗೊಂಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಶೀತಗಾಳಿ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಯಾದಗಿರಿ, ರಾಯಚೂರು, ಗದಗ, ಧಾರವಾಡ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ತಂಪಾದ ವಾತಾವರಣ ಮುಂದುವರೆಯಲಿದೆ. ಒಟ್ಟಿನಲ್ಲಿ ಮುಂದಿನ 7 ದಿನಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಚಳಿ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.



