ಬೆಂಗಳೂರು: ಮೈಸೂರು ಅರಮನೆಯ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟಗೊಂಡ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಲೂನು ಮಾರುತ್ತಿದ್ದ ವ್ಯಕ್ತಿಯ ಬಳಿ ಹೀಲಿಯಂ ಸಿಲಿಂಡರ್ ಇತ್ತು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ ಎಂದರು. ಮೃತ ವ್ಯಕ್ತಿ ಉತ್ತರ ಪ್ರದೇಶ ಮೂಲದವನು ಎಂಬ ಮಾಹಿತಿಯೂ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ನಡೆದ ಘಟನೆಯ ಬಗ್ಗೆ ವರದಿ ನೀಡಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ನಾನು ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಮೈಸೂರಿನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಅಲ್ಲಿ ಸುರಕ್ಷತೆಗೆ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸೂಚನೆ ನೀಡಲಾಗಿದೆ ಎಂದರು.
ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಕಾರ ಪಡೆದುಕೊಳ್ಳಬೇಕಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಲಾಗಿದೆ. ಈ ಹಿಂದೆ ಜಮ್ಮು ಕಾಶ್ಮೀರದಲ್ಲಿ ನಡೆದ ಘಟನೆ ನಮಗೆಲ್ಲಾ ತಿಳಿದಿದೆ. ಹಾಗಾಗಿ ಕೆ ಸೂಕ್ಷ್ಮವಾಗಿ ಇರುವಂತೆ ಹೇಳಿದ್ದೇನೆ ಎಂದರು.
ಇಂತಹ ಅಪಾಯಕಾರಿ ಸಿಲಿಂಡರ್ ಜನನಿಬಿಡ ಪ್ರದೇಶಗಳಲ್ಲಿ ಬಳಕೆ ಮಾಡುವುದು ಸರಿಯೇ ಎಂಬ ಪ್ರಶ್ನೆಗೆ, ಅವನಿಗೆ ಸಿಲಿಂಡರ್ ಹೇಗೆ ಸಿಗ್ತು? ಹೀಲಿಯಂ ಹೇಗೆ ಸಿಕ್ಕಿದೆ ಎಂಬ ಬಗ್ಗೆ ವರದಿ ಕೇಳಿದ್ದೇನೆ. ಮೈಸೂರು ನಗರ ಪೊಲೀಸ್ ಆಯುಕ್ತರು ಹಾಗೂ ಐಜಿಗೂ ಸೂಚನೆ ನೀಡದ್ದೇನೆ. ಅವರು ಏನು ವರದಿ ನೀಡುತ್ತಾರೆ ನೋಡೋಣ ಎಂದರು.



