ಬೆಂಗಳೂರು: ಕರ್ನಾಟಕದ ಗೃಹ ಇಲಾಖೆಯನ್ನು ನಡೆಸಲು ಆಗದಿದ್ದರೆ ರಾಜ್ಯದ ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,
‘ಗೊತ್ತಿಲ್ಲ ಸಚಿವರೇ ರಾಜೀನಾಮೆ ಕೊಟ್ಟು ನಡೆಯಿರಿ ಪೋಸ್ಟರ್’ ಅನ್ನು ಅವರು ಬಿಡುಗಡೆಗೊಳಿಸಿದರು. ಗೃಹ ಸಚಿವರೇ ಸಬೂಬುಗಳನ್ನು ಹೇಳಿಕೊಂಡು ಎಷ್ಟು ದಿನ ಈ ರಾಜ್ಯವನ್ನು ಹಾಳು ಮಾಡುತ್ತೀರಿ? ನೀವು ಅಧಿಕಾರ ಬಿಟ್ಟು ಕೊಡಿ. ಬೇರೆ ಯಾರಿಗಾದರೂ ತಾಕತ್ತಿದ್ದರೆ ಆಡಳಿತ ನಡೆಸಲಿ ಎಂದು ಒತ್ತಾಯಿಸಿದರು. ಡಾ. ಪರಮೇಶ್ವರ್ ಅವರೇ, ಇದು ನಿಮ್ಮ ಅಸಹಾಯಕತೆಯೇ? ಅಥವಾ ಬೇರೆಯವರು ನಿಮಗೆ ಕೆಟ್ಟ ಹೆಸರು ತರಲು ನಿಮ್ಮ ವಿರುದ್ಧವಾಗಿ ಮಾಡಿದ ಷಡ್ಯಂತ್ರವೇ ಎಂದು ಹೇಳಿ ಎಂದು ಆಗ್ರಹವನ್ನು ಮುಂದಿಟ್ಟರು.
ರಾಜ್ಯದಲ್ಲಿ ಡ್ರಗ್ ಮಾಫಿಯ ಸಂಚಲನವನ್ನೇ ಸೃಷ್ಟಿ ಮಾಡಿದೆ. ಈ ಮಾಫಿಯಕ್ಕೆ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ಅವಕಾಶ ಕಲ್ಪಿಸುವ ಮೂಲಕ ಕಾಂಗ್ರೆಸ್ ಸರಕಾರವೇ ಡ್ರಗ್ ಸರಕಾರವಾಗಿದೆ ಎಂದು ಆರೋಪಿಸಿದರು. ಕರ್ನಾಟಕದಲ್ಲಿ ಡ್ರಗ್ ಕಾರ್ಖಾನೆ ತಲೆ ಎತ್ತಿರುವುದು ಹೊರಕ್ಕೆ ಬರುತ್ತಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮೊದಲಿನಿಂದ ತಿಳಿಸಿ, ನಿದರ್ಶನ ನೀಡಿದ್ದೇವೆ. ಅತ್ಯಾಚಾರಗಳು ನಡೆಯುತ್ತಿದ್ದವು. ಎಷ್ಟೋ ಪ್ರಾಣಹಾನಿಗಳಾದವು. ಹತ್ಯೆಗಳೂ ನಡೆದವು. ಆದರೆ, ತಡೆಯಲು ಈ ಸರಕಾರದಿಂದ ಆಗಲಿಲ್ಲ ಎಂದು ಟೀಕಿಸಿದರು.



