ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶಾಮ್ ಭಟ್ ಅವರು ಹುಬ್ಬಳ್ಳಿ ತಾಲೂಕಿನ ಇನಾಂವೀರಾಪೂರ ಗ್ರಾಮದ ದಲಿತ ದೌರ್ಜನ್ಯ ಪೀಡಿತ ಕುಟುಂಬ ಸದಸ್ಯರ ಭೇಟಿ ಮತ್ತು ಗ್ರಾಮದಲ್ಲಿನ ವಾಸ್ತವಿಕ ಪರಿಸ್ಥಿತಿಯ ಅಧ್ಯಯನದ ನಂತರ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿದರು.
ಸಭೆಯಲ್ಲಿ ಟಿ. ಶಾಮ್ ಭಟ್ ಮಾತನಾಡಿ, ದೌರ್ಜನ್ಯ ಪೀಡಿತ ಕುಟುಂಬಕ್ಕೆ ಭದ್ರತೆ ಕುರಿತು ಸಂಪೂರ್ಣ ಭರವಸೆ ಮೂಡಿಸಬೇಕು. ಗ್ರಾಮದಲ್ಲಿ ಎಲ್ಲ ಕುಟುಂಬಗಳು ಪ್ರಕರಣ ಪೂರ್ವದಲ್ಲಿ ಇದ್ದಂತೆ ಅನ್ಯೋನ್ಯವಾಗಿ ಪರಸ್ಪರ ಪ್ರೀತಿ, ವಿಶ್ವಾಸದಿಂದ ವಾಸಿಸುವಂತೆ ವಾತಾವರಣ ರೂಪಿಸಬೇಕು. ಈ ನಿಟ್ಟಿನಲ್ಲಿ ಅಗತ್ಯವಿದ್ದರೆ ಗ್ರಾಮದಲ್ಲಿ ಮತ್ತಷ್ಟು ಸಭೆಗಳನ್ನು ಆಯೋಜಿಸಬೇಕು. ಗ್ರಾಮಸ್ಥರಲ್ಲಿ ಆಗಲಿ ಅಥವಾ ದೊಡಮನಿ ಕುಟುಂಬದಲ್ಲಿ ಯಾವುದೇ ಭಯದ ವಾತಾವರಣ ಇರದಂತೆ ನೋಡಿಕೊಳ್ಳಬೇಕು. ಯಾವುದೇ ವ್ಯಕ್ತಿ ಅಥವಾ ಕುಟುಂಬ ಸದಸ್ಯರ ಮಾನವ ಹಕ್ಕುಗಳ ಉಲ್ಲಂಘನೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ. ವಂಟಿಗೊಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಡಿವೈಎಸ್ಪಿ ವಿನೋದ ಮುಕ್ತೆದಾರ, ಡಿಸಿಆರ್ಇ ಡಿವೈಎಸ್ಪಿ ಸಂದೀಪಸಿಂಗ್ ಮುರಗೋಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಮ್. ಹೊನಕೇರಿ, ಡಿಮ್ಹಾನ್ಸ್ ನಿರ್ದೇಶಕ ಡಾ. ಅರುಣಕುಮಾರ ಎಮ್.ಎಸ್, ತಹಸೀಲ್ದಾರ ಜಿ.ಆರ್. ಮಜ್ಜಗಿ, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣನವರ, ವೀರಭದ್ರಪ್ಪ ಕಡಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ, ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ, ತಾಲೂಕಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅತೀಕಾ ಸಿದ್ದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಪ್ರಕರಣದ ತನಿಖೆಯನ್ನು ಈಗಾಗಲೇ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಲಾಗಿದೆ. ಪೊಲೀಸ್ ಇಲಾಖೆ ತನಿಖೆಗೆ ಸಹಕಾರ ನೀಡಿ, ಗ್ರಾಮದಲ್ಲಿ ಅಗತ್ಯವಿದ್ದರೆ ಇನ್ನಷ್ಟು ಸೂಕ್ತ ಬಂದೋಬಸ್ತ್ ಕ್ರಮವಹಿಸಬೇಕು. ಡಿಸಿಆರ್ಇ ಪಾರದರ್ಶಕ ತನಿಖೆ ಮಾಡಿ ಆದಷ್ಟು ಬೇಗ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಬೇಕು. ಸಮಾಜ ಕಲ್ಯಾಣ ಇಲಾಖೆ ನಿಯಮಾನುಸಾರ ಕುಟುಂಬಕ್ಕೆ ಅಗತ್ಯ ನೆರವು ನೀಡಬೇಕು. ಜಿಲ್ಲಾಡಳಿತ ಪ್ರಕರಣದ ಕುರಿತು ಸಂಬಂಧಿಸಿದ ಎಲ್ಲ ಇಲಾಖೆಗಳಿಂದ ಕೈಗೊಂಡ ಕ್ರಮಗಳ ಬಗ್ಗೆ ವರದಿ ಪಡೆದು ಆಯೋಗಕ್ಕೆ ಸಲ್ಲಿಸಬೇಕು. ಗ್ರಾಮದ ಶಾಂತಿ, ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ನಿಗಾ ವಹಿಸಬೇಕೆಂದು ಟಿ. ಶಾಮ್ ಭಟ್ ಹೇಳಿದರು.



