ವಿಜಯಸಾಕ್ಷಿ ಸುದ್ದಿ, ಮುಂಡರಗಿ: ತಾಲೂಕಿನ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳ ಪೌಷ್ಟಿಕತೆ ಹೆಚ್ಚಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಮಧ್ಯಾಹ್ನದ ಬಿಸಿಯೂಟದ ಜೊತೆ ಕೋಳಿಮೊಟ್ಟೆ ಯೋಜನೆ ಇದೀಗ ಮುಖ್ಯ ಶಿಕ್ಷಕರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ.
ಮೊಟ್ಟೆಯ ಬೆಲೆ ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣದಿಂದ ಸರಕಾರ ನೀಡುವ ಅನುದಾನ ಸಾಲದೆ, ಶಿಕ್ಷಕರು ತಮ್ಮ ಕೈಯಿಂದ ಹಣ ಹಾಕಿ ಮೊಟ್ಟೆ ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಅಪೌಷ್ಟಿಕತೆ ನಿವಾರಣೆ ಹಾಗೂ ಶಾಲಾ ಹಾಜರಾತಿ ಹೆಚ್ಚಿಸುವ ಉದ್ದೇಶದಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆ ಯಶಸ್ವಿಯಾಗಿ ಜಾರಿಯಲ್ಲಿದೆ. ಈ ಯೋಜನೆಯ ಮೂಲಕ ಸರಕಾರ ನೀಡುವ ಅನುದಾನದಡಿ ಈ ಹಿಂದೆ ವಾರಕ್ಕೆ ಎರಡು ದಿನಗಳ ಕಾಲ ಮೊಟ್ಟೆ ನೀಡಲಾಗುತ್ತಿತ್ತು. 2024ರ ಸೆಪ್ಟೆಂಬರ್ ತಿಂಗಳಿನಿಂದ ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹೊಂದಬೇಕು ಎನ್ನುವ ದೃಷ್ಟಿಯಿಂದ ಅಜೀಂ ಪ್ರೇಮ್ ಫೌಂಡೇಷನ್ ಸಹಕಾರದೊಂದಿಗೆ ವಾರಕ್ಕೆ ಆರು ದಿನಗಳ ಕಾಲ ಮೊಟ್ಟೆ ವಿತರಣೆಗೆ ಸರಕಾರ ನಿರ್ಧಾರ ಕೈಗೊಂಡಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆಹಣ್ಣು ಸೇವಿಸುವ ಆಯ್ಕೆಯನ್ನೂ ನೀಡಲಾಗಿದೆ.
ಈ ಯೋಜನೆ ಬಹಳ ಪರಿಣಾಮಕಾರಿಯಾಗಿದ್ದು, ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ಸರಕಾರದ ಉದ್ದೇಶ ಒಳ್ಳೆಯದೇ. ಆದರೆ ಅದನ್ನು ಜಾರಿ ಮಾಡಿರುವ ವಿಧಾನ ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಲು ಕಾರಣವಾಗಿದೆ. ಸರಕಾರ ಬಾಳೆ ಹಣ್ಣು ಖರೀದಿಗೆ 6 ರೂ, ಮೊಟ್ಟೆಗೆ 6 ರೂನಂತೆ ನೀಡುತ್ತಿದ್ದು, ಅದರಲ್ಲಿ ಮೊಟ್ಟೆ ಖರೀದಿಯ ವೆಚ್ಚ 5 ರೂ, ಮೊಟ್ಟೆ ಬೇಯಿಸಲು ಗ್ಯಾಸ್ ವೆಚ್ಚ 50 ಪೈಸೆ, 20 ಪೈಸೆ ಅಂಗಡಿಯಿಂದ ಶಾಲೆಗೆ ಮೊಟ್ಟೆ ತರಲು ಸಾಗಾಣಿಕೆ ವೆಚ್ಚ ಹಾಗೂ ಮೊಟ್ಟೆ ಸುಲಿಯಲು 30 ಪೈಸೆ ಅಡಿಗೆಯವರಿಗೆ ನೀಡಲಾಗುತ್ತಿದೆ. ಒಟ್ಟು ಒಂದು ಮೊಟ್ಟೆಗೆ ಸರಕಾರ ನೀಡುವ ಮೊತ್ತ 6 ರೂ ಆಗಿದೆ.
ಆದರೆ, ಪ್ರಸ್ತುತ ಮೊಟ್ಟೆಯ ದರ ತೀವ್ರ ಏರಿಕೆಯಾಗಿದ್ದು, ಒಂದು ಮೊಟ್ಟೆಗೆ 8 ರೂ ಇದೆ. ಹೀಗಾಗಿ, ಸರಕಾರ ಕೊಡುವ ಅನುದಾನ ಸಾಕಾಗದೇ ಹೆಚ್ಚುವರಿಯಾಗಿ ಹಣವನ್ನು ಕೈಯಿಂದ ಭರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಶಿಕ್ಷಕರು ಹೋಲ್ಸೇಲ್ ದರದಲ್ಲಿ ದೂರದ ಪಟ್ಟಣ ಪ್ರದೇಶದಿಂದ ಗ್ರಾಮೀಣ ಪ್ರದೇಶಕ್ಕೆ ತರುವಾಗ ಮಾರ್ಗ ಮಧ್ಯೆ ಒಡೆದು ಹೋದರೆ ಅದರ ವೆಚ್ಚವನ್ನು ಶಿಕ್ಷಕರೇ ಭರಿಸಬೇಕು.
ಮಕ್ಕಳಿಗೆ ಬೋಧನೆಯ ಜೊತೆಗೆ ಹೆಚ್ಚುವರಿಯಾಗಿ ಮೊಟ್ಟೆ ವಿತರಣೆಯ ಕಾಯಕವನ್ನೂ ಹೆಗಲ ಮೇಲೆ ಹಾಕಿಕೊಂಡಿರುವ ಶಿಕ್ಷಕರಿಗೆ ಬೆಲೆ ಏರಿಕೆಯಿಂದ ಶಾಲೆಗಳನ್ನು ನಿಭಾಯಿಸುವುದೇ ಸವಾಲಿನ ಕೆಲಸವಾಗಿದೆ. ಕೆಲವು ಶಿಕ್ಷಕರಂತೂ ಬಿಸಿಯೂಟದ ಜವಾಬ್ದಾರಿಯೇ ಬೇಡ ಎಂದು ಬೇರೆ ಶಿಕ್ಷಕರಿಗೆ ಹಸ್ತಾಂತರ ಮಾಡುತ್ತಿರುವ ಘಟನೆಗಳೂ ನಡೆಯುತ್ತಿವೆ. ಮೊಟ್ಟೆ ಬೆಲೆ ಏರಿಕೆ ಆಗಿರುವುದರಿಂದ ಕೆಲವು ಶಾಲೆಗಳಲ್ಲಿ ಮೊಟ್ಟೆ ಬದಲಿಗೆ ಬಾಳೆ ಹಣ್ಣು ನೀಡಲಾಗುತ್ತಿದೆ ಎಂಬ ಆರೋಪವೂ ಕೇಳಿ ಬರುತ್ತಿದೆ.
ಮುಂಡರಗಿ ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಸೇರಿ ಒಟ್ಟು 125 ಸರಕಾರಿ ಶಾಲೆಗಳಿದ್ದು, ಪ್ರತಿದಿನ ಸುಮಾರು 19178 ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಸಣ್ಣ-ಪುಟ ಶಾಲೆಗಳನ್ನು ನಿಭಾಯಿಸಬಹುದು. ಆದರೆ 100ರಿಂದ 150ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿರುವ ಶಾಲೆಗಳನ್ನು ನಿಭಾಯಿಸುವುದು ಸವಾಲಿನ ಕೆಲಸವಾಗಿದೆ. ಅಲ್ಲದೇ ಎಸ್ಡಿಎಮ್ಸಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಕಿರುಕುಳ ದಿನೆ ದಿನೇ ಹೆಚ್ಚಾಗುತ್ತಿದೆ. ಸರ್ಕಾರ ಇದರಲ್ಲಿ ಬದಲಾವಣೆ ಮಾಡಬೇಕು. ಮೊಟ್ಟೆಗಾಗಿಯೇ ನಿತ್ಯ 250 ರೂಗಿಂತ ಹೆಚ್ಚಿನ ಹಣವನ್ನು ಕೈಯಿಂದ ಭರಿಸಬೇಕಿದೆ. ಅಕಸ್ಮಾತ್ ಮೊಟ್ಟೆ ವಿತರಣೆಯಲ್ಲಿ ಲೋಪದೋಷ ಕಂಡುಬಂದರೆ ಮೇಲಧಿಕಾರಿಗಳಿಂದ ನೋಟಿಸ್ ಬರುತ್ತದೆ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಾರೆ ಹೆಸರು ಹೇಳಲಿಚ್ಛಿಸದ ಶಿಕ್ಷಕರೊಬ್ಬರು.
ಮೊಟ್ಟೆಯ ಬೆಲೆ ದಿನೇ ದಿನೇ ಹೆಚ್ಚುತ್ತಿರುವುದರಿಂದ, ಪೂರಕ ಪೌಷ್ಟಿಕ ಮೊಟ್ಟೆಯ ಘಟಕದ ಬೆಲೆ ಹೆಚ್ಚಿಸಿ ಪರಿಷ್ಕರಿಸುವಂತೆ ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಸಂಘಟನೆಯ ಮೂಲಕವೂ ಮನವಿ ನೀಡಲಾಗಿದೆ. ಈ ಕುರಿತು ಜಿಲ್ಲಾ ಶಿಕ್ಷಣಾಧಿಕಾರಿಗಳು ಸರಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪ್ರಸ್ತಾವನೆ ಕಳುಹಿಸಿದ್ದಾರೆ. ಸರಕಾರ ಆದಷ್ಟು ಬೇಗ ಈ ಬಗ್ಗೆ ಕ್ರಮ ವಹಿಸುವ ಬಗ್ಗೆ ಆಶಾಭಾವನೆ ಇದೆ.
-
ಎಸ್.ವಾಯ್. ವಿಭೂತಿ.
ಸಹಾಯಕ ನಿರ್ದೇಶಕರು,
ಅಕ್ಷರ ದಾಸೋಹ-ಮುಂಡರಗಿ.



