ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (ಟಿಎಪಿಸಿಎಂಎಸ್)ನಿಂದ ನಡೆಯುತ್ತಿರುವ ಮೆಕ್ಕೆಜೋಳ ಖರೀದಿ ಕೇಂದ್ರದಲ್ಲಿ ಪ್ರಾಮಾಣಿಕ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಸಂಘದ ಸದಸ್ಯ, ಪಕ್ಷಾತೀತ ರೈತಪರ ಹೋರಾಟ ವೇದಿಕೆ ತಾಲೂಕಾಧ್ಯಕ್ಷ ಮಹೇಶ ಹೊಗೆಸೊಪ್ಪಿನ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರೈತರ ಹೋರಾಟದ ಫಲವಾಗಿ ರಾಜ್ಯದಲ್ಲಿಯೇ ಪ್ರಥಮವಾಗಿ ಆರಂಭಗೊಂಡ ಟಿಎಪಿಸಿಎಂಎಸ್ನ ಖರೀದಿ ಕೇಂದ್ರದಲ್ಲಿ ಮೆಕ್ಕೆಜೋಳ ಮಾರಾಟಕ್ಕಾಗಿ ನೋಂದಣಿ ಮಾಡಿಸಿದ ರೈತರಿಗೆ ಒಂದು ತಿಂಗಳಾದರೂ ಮಾರಾಟಕ್ಕೆ ಅವಕಾಶ ಸಿಗುತ್ತಿಲ್ಲ. ತಡವಾಗಿ ನೋಂದಣಿ ಮಾಡಿಸಿದ ಕೆಲ ಪ್ರಭಾವಿ ರೈತರು ಈಗಾಗಲೇ ಮಾರಾಟ ಮಾಡಿದ್ದಾರೆ. ಮಾರಾಟ ಮಹಾಮಂಡಳದ ಅಧಿಕಾರಿಗಳ ಸೂಚನೆಯಂತೆ ಕೆಲ ರೈತರ ಮೆಕ್ಕೆಜೋಳ ಖರೀದಿಸಿದ್ದೇವೆ ಮತ್ತು ಸರದಿಯಲ್ಲಿದ್ದ ರೈತರು ಬಂದಿಲ್ಲ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ.
ಈ ಬಗ್ಗೆ ರೈತ ಸಂಘಟನೆಯವರು ಮಾಡುತ್ತಿರುವ ಕೆಲ ಆರೋಪಗಳನ್ನು ಅಲ್ಲಗಳೆಯುವಂತಿಲ್ಲ. ಈ ಬಗ್ಗೆ ತನಿಖೆಯಾಗಬೇಕು. ಅಲ್ಲದೇ ಈಗಾಗಲೇ ಕಡಿಮೆ ದರಕ್ಕೆ ಮೆಕ್ಕೆಜೋಳ ಮಾರಾಟ ಮಾಡಿದ ಎಲ್ಲ ರೈತರಿಗೂ ಸರ್ಕಾರದ 250 ರೂ ಸಹಾಯಧನ ಸಿಗುವಂತಾಗಬೇಕು. ಬೆಂಬಲ ಬೆಲೆಯಡಿ ಮೆಕ್ಕೆಜೋಳ ಮಾರಾಟ ಮಾಡಿ 1 ತಿಂಗಳಾಗಿದ್ದು, ಕೂಡಲೇ ರೈತರ ಖಾತೆಗೆ ಹಣ ಜಮೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.



