ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ (74) ಅವರ ಆರೋಗ್ಯದಲ್ಲಿ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜನವರಿ 10ರಂದು ಧನಕರ್ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಎರಡು ಬಾರಿ ಪ್ರಜ್ಞೆ ತಪ್ಪಿದ್ದಾಗಿ ತಿಳಿದುಬಂದಿದೆ. ವೈದ್ಯರ ಸಲಹೆ ಮೇರೆಗೆ ಇಂದು (ಸೋಮವಾರ) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ತಪಾಸಣೆಯ ಭಾಗವಾಗಿ MRI ಸ್ಕ್ಯಾನಿಂಗ್ ನಡೆಸಲು ನಿರ್ಧರಿಸಲಾಗಿದೆ.
ಏನಾಗಿತ್ತು?
ಶನಿವಾರ ಮನೆಯಲ್ಲಿ ಶೌಚಾಲಯಕ್ಕೆ ತೆರಳಿದ್ದ ವೇಳೆ ಧನಕರ್ ಅವರು ಎರಡು ಬಾರಿ ಪ್ರಜ್ಞೆ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗುವಂತೆ ಸೂಚಿಸಲಾಗಿತ್ತು. ಬಳಿಕ ಅವರು ಎರಡು ದಿನಗಳ ವಿರಾಮ ಪಡೆದಿದ್ದು, ಆರೋಗ್ಯ ಸ್ಥಿತಿಯ ಸಮಗ್ರ ಪರಿಶೀಲನೆಗಾಗಿ ಇಂದು ಏಮ್ಸ್ಗೆ ದಾಖಲಾಗಿದ್ದಾರೆ.
ಕಳೆದ ವರ್ಷ ಜುಲೈ 21ರಂದು ಧನಕರ್ ಅವರು ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆ ವೇಳೆ ಪ್ರತಿಪಕ್ಷಗಳಿಂದ ರಾಜೀನಾಮೆ ಒತ್ತಾಯಪೂರ್ವಕವಾಗಿದೆ ಎಂಬ ಆರೋಪಗಳೂ ಕೇಳಿಬಂದಿದ್ದವು. ಅಧಿಕಾರಿಗಳ ಮಾಹಿತಿ ಪ್ರಕಾರ, ಕಳೆದ ಕೆಲವು ತಿಂಗಳುಗಳಲ್ಲಿ ಧನಕರ್ ಅವರು ಕಛ್ನ ರಣ್, ಉತ್ತರಾಖಂಡ, ಕೇರಳ ಹಾಗೂ ದೆಹಲಿ ಸೇರಿದಂತೆ ಹಲವು ಸ್ಥಳಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಈ ಕಾರ್ಯಕ್ರಮಗಳ ಸಂದರ್ಭದಲ್ಲಿಯೇ ಕೆಲವು ಬಾರಿ ಅವರಿಗೆ ಪ್ರಜ್ಞೆ ತಪ್ಪಿದ ಘಟನೆಗಳು ಸಂಭವಿಸಿದ್ದಾವೆಂದು ವರದಿಗಳು ತಿಳಿಸಿವೆ.



