ವಿಜಯಸಾಕ್ಷಿ ಸುದ್ದಿ, ಗದಗ: ಎಲ್ಲ ಅಭಿವೃದ್ಧಿ ಕಾರ್ಯಗಳಿಗೂ ಹಣ ಮಾತ್ರವೇ ಸಾಕಾಗುವುದಿಲ್ಲ. ಅದರ ಜೊತೆಗೆ ಪ್ರಾಮಾಣಿಕತೆ ಅತ್ಯಂತ ಅಗತ್ಯವಾಗಿದೆ. ಪ್ರಾಮಾಣಿಕವಾಗಿ ಕೈಗೊಂಡ ಕೆಲಸಗಳೇ ಸಮಾಜಕ್ಕೆ ಶಾಶ್ವತ ಫಲ ನೀಡುತ್ತವೆ. ಈ ನಿಟ್ಟಿನಲ್ಲಿ ಇಲ್ಲಿನ ಅಭಿವೃದ್ಧಿ ಕಾರ್ಯಗಳು ನಿಜಕ್ಕೂ ಅಭಿನಂದನಾರ್ಹವಾಗಿವೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.
ಅಂತೂರ-ಬೆಂತೂರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಅಧಿಕೃತವಾಗಿ ಚಾಲನೆ ನೀಡಿ ಅವರು ಮಾತನಾಡಿದರು.
ಇಲ್ಲಿವರೆಗೂ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯನ್ನು ಸದ್ಬಳಕೆ ಮಾಡಲಾಗುತ್ತಿತ್ತು. ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರ ಈ ಕಾನೂನನ್ನು ರದ್ದುಪಡಿಸಿರುವುದು ಗ್ರಾಮೀಣ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಈ ಕಾನೂನು ಪುನಃ ಜಾರಿಯಾಗಬೇಕೆಂದು ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಸಚಿವರು ತಿಳಿಸಿದರು.
ಡಿಜಿಟಲ್ ತಂತ್ರಜ್ಞಾನ ಬಳಕೆಯನ್ನು ಒತ್ತಿ ಹೇಳಿದ ಸಚಿವರು, ಪಕ್ಕದ ಒಂದು ಗ್ರಾಮದಲ್ಲಿ 15 ವರ್ಷಗಳ ಹಿಂದೆಯೇ ಡಿಜಿಟಲ್ ಗ್ರಂಥಾಲಯ ಆರಂಭವಾಗಿದ್ದು, ಇಂದು ಅದು ಎಲ್ಲ ಗ್ರಾಮಗಳಿಗೂ ವಿಸ್ತರಿಸಿರುವುದು ಸಂತಸದ ಸಂಗತಿ. ರೈತರು ಸಹ ಡಿಜಿಟಲ್ ಗ್ರಂಥಾಲಯಗಳನ್ನು ಬಳಸಿಕೊಂಡು ಹೊಸ ತಂತ್ರಜ್ಞಾನ, ಮಾಹಿತಿ ಮತ್ತು ಜ್ಞಾನವನ್ನು ಪಡೆದುಕೊಳ್ಳಬೇಕು. ಇದರಿಂದ ರೈತ ಸಮುದಾಯದಲ್ಲಿ ತಂತ್ರಜ್ಞಾನ ಅರಿವು ಹೆಚ್ಚಾಗಿ ಕೃಷಿ ಕ್ಷೇತ್ರದಲ್ಲೂ ಹೊಸ ಬದಲಾವಣೆ ಸಾಧ್ಯವಾಗಲಿದೆ ಎಂದು ಹಾರೈಸಿದರು.
ಗ್ರಾಮದಲ್ಲಿ ಐಆರ್ಡಿಎಫ್ ಯೋಜನೆಯಡಿ ನಿರ್ಮಾಣವಾದ ಅಂಗನವಾಡಿ ಕೇಂದ್ರ, ಡಿಜಿಟಲ್ ಗ್ರಂಥಾಲಯ, ಬಸ್ ತಂಗುದಾಣ, ಎಸ್ಡಿಪಿ ಯೋಜನೆಯಡಿ ನಿರ್ಮಾಣವಾದ ಅಂಗನವಾಡಿ ಹಾಗೂ ಜಿಮ್ಗಳನ್ನು ಶುಕ್ರವಾರ ಲೋಕಾರ್ಪಣೆ ಮಾಡಲಾಗಿದೆ. ಇವುಗಳ ಸದ್ಬಳಕೆಯನ್ನು ಗ್ರಾಮದ ಸಾರ್ವಜನಿಕರು ಮಾಡಿಕೊಳ್ಳಬೇಕೆಂದು ಸಚಿವರು ತಿಳಿಸಿದರು.
ಅಂತೂರ-ಬೆಂತೂರ ಗ್ರಾಮದಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದು, ಅವುಗಳು ಪೂರ್ಣಗೊಂಡ ನಂತರ ಜನರಿಗೆ ಅಗತ್ಯ ಮೂಲ ಸೌಕರ್ಯಗಳು ಲಭ್ಯವಾಗಲಿವೆ ಎಂದು ಸಚಿವ ಎಚ್.ಕೆ. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷ ಪ್ರಕಾಶಗೌಡ ಪಾಟೀಲ ವಹಿಸಿದ್ದರು. ಉಪಾಧ್ಯಕ್ಷೆ ನೀಲವ್ವ ಬಡ್ನಿ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ಸಾಬ್ ಬಬರ್ಚಿ, ಕುರ್ತಕೋಟಿ ಗ್ರಾ.ಪಂ ಅಧ್ಯಕ್ಷ ಅಪ್ಪಣ್ಣ ಇನಾಮತಿ, ರವಿ ಮೂಲಿಮನಿ, ಎನ್.ಜೆ ಕುರಹಟ್ಟಿ, ಶಿವಪ್ರಕಾಶ ಮಣಕವಾಡ, ನಾರಾಯಣರಾವ್ ವಶೇಕರ್, ಕನಕಪ್ಪ ಹಾದಿಮನಿ, ಹೆಚ್.ಬಿ. ಹದಲಿ, ಕೆ.ಎಲ್. ಪೂಜಾರ, ವಿನೋದ ಹೂಗಾರ, ಹೈದರ ಅಲಿ ನದಾಫ್, ಶರಣಪ್ಪ, ಯಲ್ಲಪ್ಪ ಕುರಹಟ್ಟಿ, ಅಂದಾನಪ್ಪ ಚಿಂಚಲಿ, ರಾಘವೇಂದ್ರ ಓಶೇಕರ, ಪ್ರವೀಣ ಚಾಕಲಬ್ಬಿ, ನಿಂಗಪ್ಪ ಅಮ್ಮಾಗಿ, ಮುದುಕಪ್ಪ ಮನಕವಾಡ, ಪೀರಸಾಬ ನದಾಫ್, ವೈ.ಡಿ. ತಳವಾರ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ ಮುಂತಾದವರು ಇದ್ದರು.
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಮೂಲಸೌಕರ್ಯ ಸೌಲಭ್ಯಗಳನ್ನು ಹಂತ ಹಂತವಾಗಿ ಕಲ್ಪಿಸಲಾಗುತ್ತಿದೆ. ರಸ್ತೆ, ಕುಡಿಯುವ ನೀರು, ಒಳಚರಂಡಿ, ಸಾರ್ವಜನಿಕ ಕಟ್ಟಡಗಳು ಸೇರಿದಂತೆ ಜನೋಪಯೋಗಿ ಯೋಜನೆಗಳ ಮೂಲಕ ಗ್ರಾಮಗಳ ಜೀವನಮಟ್ಟವನ್ನು ಸುಧಾರಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.



