ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ ಅಭಿಪ್ರಾಯಪಟ್ಟರು.
ನಗರದ ಭೂಮರೆಡ್ಡಿ ಸರ್ಕಲ್ ಹತ್ತಿರದ ಜಗದ್ಗುರು ತೋಂಟದಾರ್ಯ ಪ್ರೌಢಶಾಲೆಯಲ್ಲಿ ಶನಿವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಮಕ್ಕಳಲ್ಲಿರುವ ಪ್ರತಿಭೆಯನ್ನು ನಾವು ಊಹಿಸಲೂ ಸಾಧ್ಯವಿಲ್ಲ. ಆದರೆ ಪ್ರತಿಭಾ ಕಾರಂಜಿ ಕಾರ್ಯಕ್ರಮದಿಂದ ಮಕ್ಕಳ ಪ್ರತಿಭೆಗಳ ಅನಾವರಣ ಸಾಧ್ಯವಾಗುತ್ತದೆ. ಮಕ್ಕಳ ವಿಚಾರಕ್ಕೆ ಬಂದಾಗ ನಾವು ಬಾಲ್ಯದಲ್ಲಿ ನಡೆದು ಬಂದ ದಾರಿಯನ್ನು ಸ್ಮರಿಸಿಕೊಳ್ಳುತ್ತೇವೆ. ವ್ಯಕ್ತಿಯ ಜೀವನದಲ್ಲಿ ಬಾಲ್ಯಾವಸ್ಥೆ ಅತ್ಯುತ್ತಮ ಕ್ಷಣವಾಗಿರುತ್ತದೆ. ಶಿಕ್ಷಕರ ವೃತ್ತಿ ಪವಿತ್ರವಾಗಿದೆ. ಮಕ್ಕಳು ಶಾಲೆಗೆ ಬಂದಾಗ ಅವರ ಪ್ರತಿಭೆಗಳನ್ನು ಗುರುತಿಸುವವರೇ ಶಿಕ್ಷಕರು. ಬಾಲ್ಯದಲ್ಲಿ ನೃತ್ಯ, ಸಂಗೀತ, ಚಿತ್ರಕಲೆ ಮುಂತಾದ ಕಲೆಗಳನ್ನು ಕಲಿತುಕೊಂಡು ಜೀವನದಲ್ಲಿ ಉಜ್ವಲ ಭವಿಷ್ಯ ನಿರ್ಮಾಣ ಮಾಡಬಹುದು. ಶಿಕ್ಷಕರು ಮಕ್ಕಳಲ್ಲಿ ಅಡಕವಾಗಿರುವ ಕಲೆಗಳನ್ನು ಪ್ರೋತ್ಸಾಹಿಸಬೇಕು. ಪ್ರತಿಭಾ ಕಾರಂಜಿ ಕಾರ್ಯಕ್ರಮದ ಸದುಪಯೋಗವನ್ನು ಮಕ್ಕಳು ಪಡೆದಿಕೊಳ್ಳಬೇಕು. ಮಕ್ಕಳು ವಿದ್ಯಾವಂತರಾಗಿ ಉನ್ನತ ಹುದ್ದೆ ಅಲಂಕರಿಸಿ ಸದೃಢ ದೇಶ ನಿರ್ಮಾಣ ಮಾಡಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಡಯಟ್ (ಅಭಿವೃದ್ಧಿ) ಉಪನಿರ್ದೇಶಕ ಜಿ.ಎಂ. ಮುಂದಿನಮನಿ, ಪಿ.ಎಂ ಪೋಷಣ್ ಶಕ್ತಿ ನಿರ್ಮಾಣ ಶಿಕ್ಷಣಾಧಿಕಾರಿ ಸರಸ್ವತಿ ಡಿ.ಕನವಳ್ಳಿ, ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಎಚ್.ಬಿ. ರಡ್ಡೇರ, ಗದಗ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ, ಗದಗ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ. ಶೆಟ್ಟೆಪ್ಪನವರ, ಎಸ್.ಎನ್. ಬಳ್ಳಾರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಡಾ. ಬಸವರಾಜ ಬಳ್ಳಾರಿ, ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಎಫ್. ಪೂಜಾರ, ಕ.ರಾ.ಪ್ರಾ.ಶಾ.ಶಿ ಸಂಘದ ಜಿಲ್ಲಾಧ್ಯಕ್ಷ ವಿ.ಎಂ. ಹಿರೇಮಠ, ಜಿ.ಪಿ.ಟಿ ಸಂಘದ ಜಿಲ್ಲಾಧ್ಯಕ್ಷ ಹಾಲನಗೌಡ ಪಾಟೀಲ, ಪ್ರೌಢಶಾಲಾ ವೃತ್ತಿ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಕೆ. ನಿಂಬನಗೌಡ್ರ, ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಎ. ಯರಗುಡಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಿದ್ದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಉನ್ನತ ಶಿಕ್ಷಣ ಸಚಿವರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದು ಹೆಮ್ಮೆಯ ವಿಷಯ. ಪಾಲಕರು ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಉತ್ತಮವಾದ ಪ್ರದರ್ಶನ ನೀಡಿ ಮಕ್ಕಳು ಉನ್ನತ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು. ಶಾಲೆಯಲ್ಲಿನ ಶಿಕ್ಷಕರು ಮಕ್ಕಳಲ್ಲಿನ ಕಲೆಗಳನ್ನು ಪ್ರೋತ್ಸಾಹಿಸಬೇಕು ಎಂದರು.



