ಮೈಸೂರು: ಮೈಸೂರಿನಲ್ಲಿ ಪತ್ತೆಯಾಗಿದ್ದು ಕೇವಲ ಫಿನಾಯಿಲ್ ಫ್ಯಾಕ್ಟರಿ ಎಂಬ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆಗೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಕೃತ ಪ್ರಕಟಣೆ ತೀವ್ರ ಹಿನ್ನಡೆಯನ್ನುಂಟುಮಾಡಿದೆ. ಮೈಸೂರಿನ ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿ ಫಿನಾಯಿಲ್ ಫ್ಯಾಕ್ಟರಿ ಹೆಸರಲ್ಲಿ ಹೈಟೆಕ್ ರಹಸ್ಯ ಡ್ರಗ್ಸ್ ಲ್ಯಾಬ್ ಕಾರ್ಯನಿರ್ವಹಿಸುತ್ತಿತ್ತು ಎಂದು ಎನ್ಸಿಬಿ ಸ್ಪಷ್ಟಪಡಿಸಿದೆ.
ಗುಜರಾತ್ ಮತ್ತು ಕರ್ನಾಟಕದಲ್ಲಿ ಹರಡಿದ್ದ ಮಾದಕ ದ್ರವ್ಯ ಜಾಲವನ್ನು ಎನ್ಸಿಬಿ ಭೇದಿಸಿದ್ದು, ಸುಮಾರು 10 ಕೋಟಿ ರೂ. ಮೌಲ್ಯದ 35 ಕೆಜಿ ಮೆಫೆಡ್ರೋನ್ (MD), 1.8 ಕೆಜಿ ಅಫೀಮು ಹಾಗೂ 25.6 ಲಕ್ಷ ರೂ. ನಗದು ವಶಪಡಿಸಿಕೊಂಡಿದೆ. ರಾಜಸ್ಥಾನದ ಜಾಲೋರ್ ಜಿಲ್ಲೆಯ ಮಹೇಂದ್ರ ಕುಮಾರ್ ವಿಷ್ಣೋಯ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಎನ್ಸಿಬಿ ಮಾಹಿತಿ ಪ್ರಕಾರ, ಜೈಲಿನಲ್ಲಿದ್ದಾಗಲೇ ಡ್ರಗ್ಸ್ ತಯಾರಿಕೆ ಕಲಿತ ಮಹೇಂದ್ರ ಕುಮಾರ್, ಜಾಮೀನಿನ ಮೇಲೆ ಹೊರಬಂದ ನಂತರ ಮೈಸೂರಿನಲ್ಲಿ ಈ ರಹಸ್ಯ ಡ್ರಗ್ಸ್ ಲ್ಯಾಬ್ ಸ್ಥಾಪಿಸಿದ್ದ. ದಾಳಿ ವೇಳೆ ಅತ್ಯಾಧುನಿಕ ಉಪಕರಣಗಳು ಮತ್ತು ಡ್ರಗ್ಸ್ ತಯಾರಿಕೆಗೆ ಬೇಕಾದ ವಸ್ತುಗಳು ಪತ್ತೆಯಾಗಿವೆ.
ಈ ಹಿಂದೆ ಗೃಹ ಸಚಿವರು “ಇಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ” ಎಂದು ಸ್ಥಳೀಯ ಪೊಲೀಸರ ವರದಿಯನ್ನು ಸಮರ್ಥಿಸಿಕೊಂಡಿದ್ದರು. ಆದರೆ ಕೇಂದ್ರ ಸಂಸ್ಥೆಯಾದ ಎನ್ಸಿಬಿ ಇದೀಗ ಸಂಪೂರ್ಣ ಡ್ರಗ್ಸ್ ಉತ್ಪಾದನಾ ಘಟಕ ಪತ್ತೆಯಾಗಿದೆ ಎಂದು ಬಹಿರಂಗಪಡಿಸಿರುವುದು ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದ್ದು, ರಾಜ್ಯದ ಗುಪ್ತಚರ ವ್ಯವಸ್ಥೆ ಮತ್ತು ಸ್ಥಳೀಯ ತನಿಖೆಯ ಮೇಲೂ ಪ್ರಶ್ನೆ ಎತ್ತಿದೆ.
ಬಂಧಿತ ಆರೋಪಿಗಳ ವಿರುದ್ಧ NDPS ಕಾಯ್ದೆಯಡಿ ಕಠಿಣ ಪ್ರಕರಣ ದಾಖಲಿಸಲಾಗಿದ್ದು, ಮೈಸೂರಿನ ಘಟಕಕ್ಕೆ ರಾಸಾಯನಿಕ ಪೂರೈಕೆ ಮಾಡುತ್ತಿದ್ದ ಜಾಲದ ಕುರಿತು ತನಿಖೆ ಮುಂದುವರಿದಿದೆ. ‘ನಶಾ ಮುಕ್ತ ಭಾರತ’ ಅಭಿಯಾನದಡಿ ದೇಶಾದ್ಯಂತ ಇಂತಹ ರಹಸ್ಯ ಡ್ರಗ್ಸ್ ಘಟಕಗಳ ಮೇಲೆ ನಿಗಾ ಇಡಲಾಗುತ್ತದೆ ಎಂದು ಎನ್ಸಿಬಿ ತಿಳಿಸಿದೆ.



