ಕನಕಪುರ: ಕನಕಪುರದ ಮಕ್ಕಳು ಬೆಳೆದರೆ, ನನ್ನ ಮಕ್ಕಳು ಬೆಳೆದಷ್ಟೇ ಖುಷಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ನಡೆಯುತ್ತಿರುವ ಕನಕೋತ್ಸವದಲ್ಲಿ ಶನಿವಾರ ನಡೆದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
ಇಲ್ಲಿರುವ ಮಕ್ಕಳು ಹಾಗೂ ಇವರನ್ನು ತಯಾರು ಮಾಡಿದ ತಂದೆ ತಾಯಿ, ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನೀವು ನಿಮ್ಮ ಮೂಲವನ್ನು ಮರೆತರೆ ಯಶಸ್ಸು ಸಾಧಿಸುವುದಿಲ್ಲ. ವಿದೇಶಿಗರು ಭಾರತವನ್ನು ಬೆಂಗಳೂರು ಮೂಲಕ ನೋಡುತ್ತಿದ್ದಾರೆ. ನಾನು ಇತ್ತೀಚೆಗೆ ದಾವೋಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಲ್ಲಿ ಮಾತನಾಡಿದೆ. ನಮ್ಮ ಬೆಂಗಳೂರು ಹಾಗೂ ಇಲ್ಲಿನ ಯುವಕರ ಪ್ರತಿಭೆ ಬಗ್ಗೆ ನಾನು ಅಲ್ಲಿ ಮಾತನಾಡಿ ಬಂದಿದ್ದೇನೆ. ನಮ್ಮ ಯುವಕರು ಬಹಳ ಪ್ರತಿಭಾವಂತರು, ನೀವು ನಮ್ಮಲ್ಲಿ ಹೂಡಿಕೆ ಮಾಡಿ ಬನ್ನಿ ಎಂದು ಆಹ್ವಾನ ನೀಡಿದ್ದೇನೆ” ಎಂದು ತಿಳಿಸಿದರು.
“ನಾನು ಓದುವಾಗ ನಮ್ಮ ಗುರುಗಳು ಒಂದು ಮಾತು ಹೇಳುತ್ತಿದ್ದರು. ವಿದ್ಯಾ ದದಾತಿ ವಿನಯಂ, ವಿನಯಾತ್ ಯಾತಿ ಪಾತ್ರತಾಂ, ಪಾತ್ರತ್ವಾತ್ ಧನಂ ಆಪ್ನೋತಿ, ಧನಾತ್ ಧರ್ಮ ತಥಃ ಸುಖಂ. ಅಂದರೆ ವಿದ್ಯೆಯಿಂದ ವಿನಯ, ವಿನಯದಿಂದ ವ್ಯಕ್ತಿತ್ವ, ವ್ಯಕ್ತಿತ್ವದಿಂದ ಹಣ, ಹಣದಿಂದ ಧರ್ಮಕಾರ್ಯಗಳು, ಧರ್ಮ ಕಾರ್ಯಗಳಿಂದ ಸುಖ ಸಿಗುತ್ತದೆ ಎಂದರ್ಥ” ಎಂದರು.
“ನಾನು ಪದವಿ ಪಡೆದಿದ್ದು, ನನ್ನ 47ನೇ ವಯಸ್ಸಿನಲ್ಲಿ. ಅಂದರೆ 2008ರಲ್ಲಿ. ನಾನು ಪದವಿ ಅಂತಿಮ ವರ್ಷದಲ್ಲಿ ಓದುತ್ತಿರುವಾಗ ವಿದ್ಯಾರ್ಥಿ ನಾಯಕನಾಗಿದ್ದಾಗಲೇ ಪಕ್ಷದಿಂದ ಚುನಾವಣೆಗೆ ಟಿಕೆಟ್ ನೀಡಲಾಯಿತು. ನಾನು ಬಂಗಾರಪ್ಪ, ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ಸಚಿವನಾದಾಗಿಂತ ನನಗೆ ಪದವಿ ಪಡೆದಾಗ ಹೆಚ್ಚು ಖುಷಿಯಾಯಿತು. ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ಉದ್ಯಮಿ, ಆಸಕ್ತಿಯಲ್ಲಿ ಶಿಕ್ಷಣ ತಜ್ಞ, ಆಸಕ್ತಿಯಲ್ಲಿ ನಾನು ರಾಜಕಾರಣಿ” ಎಂದು ಹೇಳಿದರು.



