ಮುಂಬೈ: ಪಾಕಿಸ್ತಾನ ಕ್ರಿಕೆಟ್ ತಂಡ ಭಾರತ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದ್ದರೂ, ಭಾರತ ಐಸಿಸಿ ಟಿ20 ವಿಶ್ವಕಪ್ ಪಂದ್ಯವಾಡಲು ಶ್ರೀಲಂಕಾಗೆ ತೆರಳಲಿದೆ. ಫೆಬ್ರವರಿ 15ರಂದು ಕೊಲಂಬೋದಲ್ಲಿರುವ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಪಂದ್ಯ ನಿಗದಿಯಾಗಿದ್ದು, ಬಿಸಿಸಿಐ (BCCI) ಐಸಿಸಿಯ ಶಿಷ್ಟಾಚಾರದಂತೆ ತನ್ನ ಜವಾಬ್ದಾರಿಗಳನ್ನು ಪೂರೈಸಲು ಸಜ್ಜಾಗಿದೆ.
ಪಾಕಿಸ್ತಾನ ತಂಡ ಕೊಲಂಬೋಗೆ ಆಗಮಿಸಿದರೂ ಭಾರತ ವಿರುದ್ಧ ಆಡದೇ ಇರಲು ನಿರ್ಧರಿಸಿದೆ ಎನ್ನಲಾಗುತ್ತಿದೆ. ಆದರೆ, ಪಾಕಿಸ್ತಾನ ಸರ್ಕಾರದ ಈ ನಿರ್ಧಾರವನ್ನು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ಇದುವರೆಗೆ ಐಸಿಸಿಗೆ ಅಧಿಕೃತವಾಗಿ ತಿಳಿಸಿಲ್ಲ. ಈ ಹಿನ್ನೆಲೆಯಲ್ಲಿ ಪಂದ್ಯ ನಡೆಯುತ್ತದೆಯೇ ಇಲ್ಲವೇ ಎಂಬ ಬಗ್ಗೆ ಗೊಂದಲ ಉಂಟಾಗಿತ್ತು.
ಪಾಕಿಸ್ತಾನ ಪಂದ್ಯವಾಡದಿದ್ದರೆ ಭಾರತವೂ ಶ್ರೀಲಂಕಾಗೆ ಹೋಗುತ್ತದೆಯೇ ಎಂಬ ಪ್ರಶ್ನೆಗೆ ಇದೀಗ ಸ್ಪಷ್ಟ ಉತ್ತರ ಸಿಕ್ಕಿದ್ದು, ಪಾಕ್ ಬಹಿಷ್ಕಾರ ಘೋಷಿಸಿದರೂ ಭಾರತ ತಂಡ ಕೊಲಂಬೋಗೆ ಪ್ರಯಾಣ ಬೆಳೆಸಲಿದೆ ಎಂದು ವರದಿಯಾಗಿದೆ.
ಬಿಸಿಸಿಐ ಮೂಲಗಳ ಪ್ರಕಾರ, ಭಾರತ ತಂಡವು ನಿಗದಿತ ವೇಳಾಪಟ್ಟಿಯಂತೆ ಅಭ್ಯಾಸ ನಡೆಸಲಿದೆ, ಪತ್ರಿಕಾಗೋಷ್ಠಿಗಳಲ್ಲಿ ಭಾಗವಹಿಸಲಿದೆ ಹಾಗೂ ಪಂದ್ಯದ ರೆಫರಿ ಅಧಿಕೃತವಾಗಿ ಪಂದ್ಯ ರದ್ದುಗೊಳಿಸುವವರೆಗೆ ಕಾಯಲಿದೆ. ಐಸಿಸಿಯ ನಿಯಮಾವಳಿಗಳನ್ನು ಸಂಪೂರ್ಣವಾಗಿ ಪಾಲಿಸುವುದು ಭಾರತದ ನಿಲುವಾಗಿದೆ ಎಂದು ತಿಳಿಸಲಾಗಿದೆ.
ಪಾಕಿಸ್ತಾನವು ಈ ಹಿಂದೆ ಏಷ್ಯಾ ಕಪ್ ಟ್ರೋಫಿ ಹಸ್ತಾಂತರ ಸೇರಿದಂತೆ ಹಲವು ವಿಚಾರಗಳಲ್ಲಿ ಹೈಡ್ರಾಮಾ ಸೃಷ್ಟಿಸಿದ್ದನ್ನು ಉಲ್ಲೇಖಿಸಿ, ಭಾರತದ ಪಂದ್ಯಕ್ಕೂ ಮುನ್ನ ಮತ್ತೊಂದು ನಾಟಕ ನಡೆಯುವ ಸಾಧ್ಯತೆಯಿದೆ ಎಂದು ಕ್ರಿಕೆಟ್ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಭಾರತ ಶ್ರೀಲಂಕಾಗೆ ತೆರಳದೇ ಇದ್ದರೆ, “ನಾವು ಆಡಲು ಸಿದ್ದರಾಗಿದ್ದೇವೆ, ಆದರೆ ಭಾರತ ಬಂದಿಲ್ಲ” ಎಂದು ಹೇಳಿ ಮತ್ತೊಂದು ವಿವಾದ ಹುಟ್ಟುಹಾಕುವ ಸಾಧ್ಯತೆ ಇರುವುದರಿಂದ, ಯಾವುದೇ ಸಂಶಯಕ್ಕೆ ಅವಕಾಶ ಕೊಡದಂತೆ ಭಾರತ ತಂಡ ಲಂಕಾಗೆ ತೆರಳಲು ನಿರ್ಧರಿಸಿದೆ ಎನ್ನಲಾಗಿದೆ.
ಒಂದು ವೇಳೆ ಪಾಕಿಸ್ತಾನ ಭಾರತ ವಿರುದ್ಧದ ಪಂದ್ಯವನ್ನು ಆಡದೇ ಇದ್ದರೆ, ಐಸಿಸಿ ಪಾಕಿಸ್ತಾನ ವಿರುದ್ಧ ಭಾರೀ ದಂಡ ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಭಾರತದ ಈ ನಿಲುವಿನ ಬಳಿಕ ಪಾಕಿಸ್ತಾನ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರ ಕುರಿತು ಈಗ ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ.



