ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರ ಶೇ.100ರಷ್ಟು ಮನರಂಜನಾ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದೆ. ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆಯಂತಹ ಗಂಭೀರ ವಿಷಯವಸ್ತುವನ್ನು ಒಳಗೊಂಡಿರುವ ಹಿನ್ನೆಲೆದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಇಲಾಖೆಗೆ ಈ ಕುರಿತು ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ನಟ ದುನಿಯಾ ವಿಜಯ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ‘ಲ್ಯಾಂಡ್ ಲಾರ್ಡ್’ ಚಿತ್ರದ ಕಥಾಹಂದರ, ಉದ್ದೇಶ ಹಾಗೂ ಸಮಾಜಕ್ಕೆ ನೀಡುವ ಸಂದೇಶದ ಬಗ್ಗೆ ವಿವರಿಸಿದರು. ಈ ಚಿತ್ರವು ಕೇವಲ ಮನರಂಜನೆಗೆ ಸೀಮಿತವಾಗದೇ, ಗ್ರಾಮೀಣ ಪ್ರದೇಶದ ಫ್ಯೂಡಲ್ ವ್ಯವಸ್ಥೆ, ಜಾತಿ ಪದ್ಧತಿಯ ಕರಾಳ ಮುಖ ಹಾಗೂ ಶೋಷಿತರ ಪರವಾದ ಧ್ವನಿಯನ್ನು ಪ್ರತಿನಿಧಿಸುತ್ತದೆ ಎಂದು ವಿವರಿಸಿದರು.
ಚಿತ್ರದ ಆಶಯವನ್ನು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜದಲ್ಲಿ ಬೇರೂರಿರುವ ಅಸಮಾನತೆ ಮತ್ತು ಜಾತಿ ಶೋಷಣೆಯ ವಿರುದ್ಧ ಧ್ವನಿ ಎತ್ತುವ ಸಿನಿಮಾಗಳಿಗೆ ಸರ್ಕಾರದಿಂದ ಬೆಂಬಲ ಅಗತ್ಯವೆಂದು ಅಭಿಪ್ರಾಯಪಟ್ಟರು. ಇಂತಹ ಸಾಮಾಜಿಕ ಬದ್ಧತೆಯ ಚಿತ್ರಗಳನ್ನು ಪ್ರೋತ್ಸಾಹಿಸುವುದು ಸರ್ಕಾರದ ಕರ್ತವ್ಯ ಎಂದೂ ಹೇಳಿದರು.



