ಉತ್ತರ ಕನ್ನಡ: ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಅಕ್ರಮ ಸಂಬಂಧದ ಆರೋಪದಿಂದ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ಗುರುಜಿ ಜೊತೆ ಮಹಿಳೆ ಅನೈತಿಕ ಸಂಬಂಧ ಹೊಂದಿದ್ದಾರೆಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಕ್ಕೆ ನಡೆಸಿದ ಹಲ್ಲೆಯಲ್ಲಿ ವಸಂತ್ ನಾಯ್ಕ ಎಂಬವರು ಪ್ರಾಣ ಕಳೆದುಕೊಂಡಿದ್ದಾರೆ.
ಪೊಲೀಸ್ ಮಾಹಿತಿಯಂತೆ, ಸುಚಿತ್ರಾ ಎಂಬ ಮಹಿಳೆ ಶಿವಮೊಗ್ಗ ಮೂಲದ ಕಮಲಾಕರ ಭಟ್ ಗುರೂಜಿ ಜೊತೆ ಅಕ್ರಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ಸುಚಿತ್ರಾ ಪುತ್ರಿಗೆ ತಿಳಿದು, ಆಕೆ ತಂದೆ ಮಹೇಶ್ ನಾಯ್ಕಗೆ ಮಾಹಿತಿ ನೀಡಿದ್ದಾಳೆ. ಬಳಿಕ ಮಹೇಶ್ ನಾಯ್ಕ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.
ಈ ದೂರುದಿಂದ ಆಕ್ರೋಶಗೊಂಡ ಸುಚಿತ್ರಾ, ಆಕೆಯ ತಂದೆ ಲೋಕನಾಥ ಚೌಡಪ್ಪ ನಾಯ್ಕ್ ಹಾಗೂ ಸಹಚರರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿಯಲ್ಲಿ ಮಹೇಶ್ ನಾಯ್ಕ, ವಸಂತ್ ನಾಯ್ಕ ಮತ್ತು ಕುಮಾರ್ ಗಂಭೀರವಾಗಿ ಗಾಯಗೊಂಡರು. ವಸಂತ್ ನಾಯ್ಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಗುರೂಜಿ ಕಮಲಾಕರ ಭಟ್ ಸೇರಿ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದಲ್ಲಿ ಮೂವರು ಮತ್ತು ಸಿದ್ದಾಪುರದಲ್ಲಿ ನಾಲ್ವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಪ್ರಕರಣದಲ್ಲಿ ಸುಚಿತ್ರಾ (ಎ1), ಲೋಕನಾಥ ಚೌಡಪ್ಪ ನಾಯ್ಕ್ (ಎ2), ಇತರ ಸಹಚರರು (ಎ3) ಮತ್ತು ಗುರೂಜಿ ಕಮಲಾಕರ ಭಟ್ (ಎ4) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. ಅಕ್ರಮ ಸಂಬಂಧ, ಕುಟುಂಬ ಕಲಹ ಮತ್ತು ಪ್ರತೀಕಾರ ಈ ಕೊಲೆಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ.



