ಚಿತ್ರದುರ್ಗ:- ಒಂದು ವರ್ಷದಿಂದ ನಿರಂತರವಾಗಿ ನಾಲ್ಕು–ಐದು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಶಿಕ್ಷಕನನ್ನು ಭರಮಸಾಗರ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿದ್ಯಾರ್ಥಿನಿಯರ ಹಾಸ್ಟೆಲ್ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯರನ್ನು ಖಾಸಗಿ ಕೊಠಡಿಗೆ ಕರೆಸಿ ಅವರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. 2025ರ ಜುಲೈ 25ರಂದು ಧರ್ಮಸ್ಥಳಕ್ಕೆ ನಡೆದ ಪ್ರವಾಸದ ಸಂದರ್ಭದಲ್ಲೂ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದ್ದು, ಈ ವಿಚಾರವನ್ನು ಒಬ್ಬ ಬಾಲಕಿ ಮನೆಗೆ ಬಂದು ಪೋಷಕರಿಗೆ ತಿಳಿಸಿದ್ದಾಳೆ.
ಬಳಿಕ ಪೋಷಕರು ವಿಷಯವನ್ನು ಮುಖ್ಯ ಶಿಕ್ಷಕರಿಗೆ ತಿಳಿಸಿದ್ದು, ಅವರು ಶಾಲಾ ಆಡಳಿತಾಧಿಕಾರಿಗೆ ದೂರು ನೀಡಿದ್ದಾರೆ. ಆಡಳಿತಾಧಿಕಾರಿ ಆರೋಪಿತ ಶಿಕ್ಷಕ ರಂಗಣ್ಣನನ್ನು ಬೇರೆಡೆಗೆ ವರ್ಗಾವಣೆ ಮಾಡಿ ತನಿಖಾ ಸಮಿತಿ ರಚಿಸಿದ್ದು, ತನಿಖೆಯಲ್ಲಿ ಆರೋಪ ಸತ್ಯವೆಂದು ದೃಢಪಟ್ಟಿದೆ. ಇದರ ಆಧಾರದಲ್ಲಿ ಕಳೆದ ಎರಡು ದಿನಗಳ ಹಿಂದೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಇಓ ಸಮೇತ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಂತರ ವರ್ಗಾವಣೆಯಾಗಿ ಹಿರಿಯೂರು ತಾಲೂಕಿನಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ರಂಗಣ್ಣನನ್ನು ಬಂಧಿಸಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.



