ಬೆಂಗಳೂರು: ಸಮಾಜದ ಹಿತಾಸಕ್ತಿ ಮತ್ತು ನ್ಯಾಯಬದ್ಧ ಪ್ರಾತಿನಿಧ್ಯವನ್ನು ಖಾತ್ರಿಪಡಿಸಲು ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ನಡೆಯಿತು.
ಈ ಸಭೆಯಲ್ಲಿ ಯಾವುದೇ ನಾಯಕತ್ವದ ವಿವಾದ ಅಥವಾ ವೈಯಕ್ತಿಕ ಅಜೆಂಡಾಗಳಿರಲಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಲಿಂಗಾಯತ ಸಮುದಾಯವು ರಾಜ್ಯದ ಅತ್ಯಂತ ದೊಡ್ಡ ಸಮುದಾಯವಾಗಿದೆ. ಹೋದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 57 ಟಿಕೆಟ್ ನೀಡಿದ್ದು, 34 ಶಾಸಕರು ಗೆದ್ದಿದ್ದಾರೆ. ಮೊನ್ನೆಯ ಸಭೆಗೆ 28 ಮಂದಿ ಹಾಜರಿದ್ದರು. ಸಚಿವರ ಪೈಕಿ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ಶರಣಬಸಪ್ಪ ದರ್ಶನಾಪುರ ಮಾತ್ರ ಅನಿವಾರ್ಯ ಕಾರಣಗಳಿಂದ ಪಾಲ್ಗೊಳ್ಳಲಿಲ್ಲ, ಉಳಿದ ಎಲ್ಲ ಲಿಂಗಾಯತ ಸಚಿವರು ಹಾಜರಿದ್ದರು” ಎಂದರು.
ಸಭೆಯಲ್ಲಿ, ಸಮುದಾಯಕ್ಕೆ ಸರ್ಕಾರದ ವಿವಿಧ ಹಂತಗಳಲ್ಲಿ ದೊರೆಯಬೇಕಾದ ನ್ಯಾಯಬದ್ಧ ಪ್ರಾತಿನಿಧ್ಯ ಮತ್ತು ಹಿತಾಸಕ್ತಿ ವಿಚಾರಗಳು ಚರ್ಚೆಯಾಗಿದೆ. “ಜನಪ್ರತಿನಿಧಿಗಳಾಗಿ ಆಯ್ಕೆಯಾಗುವುದಾದ ಮೇಲೆ ಸಮುದಾಯದ ಹಿತವನ್ನು ನೋಡುವುದು ನಮ್ಮ ಕರ್ತವ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 70 ಲಿಂಗಾಯತ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದು, 17 ಮಂದಿ ಜಯ ಸಾಧಿಸಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.



