ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ವಿವಾಹಿತ ಹಿಂದೂ ಮಹಿಳೆಯ ಮನೆಗೆ ತೆರಳಿದ್ದ ಕಾಂಗ್ರೆಸ್ ಮುಖಂಡನೊಬ್ಬ ಸ್ಥಳೀಯ ಯುವಕರಿಂದ ಹಲ್ಲೆಗೆ ಒಳಗಾದ ಘಟನೆ ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಚಿಕ್ಕಮಗಳೂರು ನಗರದ ಗಾಂಧಿನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ವೇಳೆ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಶರೀಫ್ ಇದ್ದುದನ್ನು ಗಮನಿಸಿದ ಅಕ್ಕಪಕ್ಕದ ಮನೆಯ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಪ್ರಶ್ನಿಸಿ ಯುವಕರು ಮುಖಂಡನಿಗೆ ಥಳಿಸಿರುವುದಾಗಿ ತಿಳಿದುಬಂದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಘಟನೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.
ಈ ಪ್ರಕರಣದ ಬಗ್ಗೆ ಮಹಿಳೆಯು ಸ್ವತಃ ಒಂದು ವಿಡಿಯೋ ಹಂಚಿಕೊಂಡಿದ್ದು, ರಾಹಿಲ್ ಶರೀಫ್ ತನ್ನ ಸ್ನೇಹಿತನಾಗಿದ್ದು, ತಾನು ಅಸ್ವಸ್ಥರಾಗಿದ್ದ ಕಾರಣ ಔಷಧಿ ನೀಡಲು ಮನೆಗೆ ಬಂದಿದ್ದರು ಎಂದು ಸ್ಪಷ್ಟನೆ ನೀಡಿದ್ದಾಳೆ. ಆ ಸಮಯದಲ್ಲಿ ಕೆಲವರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಮಹಿಳೆ ಹೇಳಿದ್ದಾಳೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದು, ವೈರಲ್ ಆಗಿರುವ ವಿಡಿಯೋ ಮತ್ತು ಇತರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



